ಮೈಸೂರು : ಸಿಎಂ ಬಿ.ಎಸ್. ಯಡಿಯೂರಪ್ಪನವರು ತಮ್ಮ ಇಲಾಖೆಯ ಕೆಲಸಗಳಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಎರಡು ದಿನಗಳ ಹಿಂದೆ ರಾಜ್ಯಪಾಲರಿಗೆ ಮತ್ತು ಹೈಕಮಾಂಡ್ ಗೆ ಗ್ರಾಮೀಣಾಭಿವೃದ್ಧಿ ಸಚಿವ ಈಶ್ವರಪ್ಪ ಪತ್ರವನ್ನು ಬರೆದಿದ್ದು, ಈ ಪತ್ರದಿಂದ ಬಿಜೆಪಿಯಲ್ಲಿ ಅಸಮಾಧಾನ ಉಂಟಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಈಶ್ವರಪ್ಪನವರು ನಾನು ರೆಬಲ್ ಅಲ್ಲ, ನಾನು ಪಕ್ಷಕ್ಕೆ ಲಾಯಲ್ ನಾನು ಯಾವುದಕ್ಕೂ ಬಗ್ಗುವುದಿಲ್ಲ, ಜಗ್ಗುವುದಿಲ್ಲ ಎಂದು ಹೇಳಿದ್ದಾರೆ.
ನಾನು ಪತ್ರದ ವಿಚಾರವನ್ನು ರಾಜ್ಯ ಉಸ್ತುವಾರಿ ಆರುಣ್ ಸಿಂಗ್ , ನಳೀನ್ ಕುಮಾರ್ ಕಟಿಲ್ ಹಾಗೂ ಸಿಟಿ ರವಿ ಎಲ್ಲರ ಗಮನಕ್ಕೆ ತಂದಿದ್ದೇನೆ. ಅಲ್ಲದೇ ಪ್ರಧಾನಿ ಮೋದಿ, ಅಮಿತ್ ಶಾ ಗೂ ಪತ್ರ ಬರೆದಿದ್ದೇನೆ. ನೇರವಾಗಿ ಶಾಸಕರಿಗೆ ಅನುದಾನ ಹಂಚಿಕೆ ಮಾಡಿರುವುದು ಕಾನೂನು ಪ್ರಕಾರ ಸರಿಯಲ್ಲ. ಎಂಬುದನ್ನು ಎಲ್ಲರ ಗಮನಕ್ಕೆ ತಂದಿದ್ದೇನೆ ಎಂದರು.
ಇದು ನನ್ನ ಹಾಗೂ ಯಡಿಯೂರಪ್ಪ ಅವರ ನಡುವಿನ ವೈಯಕ್ತಿಕ ವಿಚಾರವಲ್ಲ. ಯಡಿಯೂರಪ್ಪನವರ ಕಾರ್ಯವೈಖರಿ ಬಗ್ಗೆ ಪತ್ರ ಬರೆದಿದ್ದೇನೆ. ಬಿಜೆಪಿ ಪಕ್ಷ ನನಗೆ ತಾಯಿ ಇದ್ದ ಹಾಗೆ, ನನ್ನ ವಿರುದ್ಧ ಕೆಲವು ಶಾಸಕರು, ಸಚಿವರು ಸಹಿ ಸಂಗ್ರಹ ಮಾಡಿ ಕ್ರಮ ಜರುಗಿಸುವಂತೆ ಒತ್ತಾಯ ಮಾಡಿದ್ದಾರೆ, ಆದರೆ ನಾನು ಯಾರಿಗೂ ಜಗ್ಗುವುದಿಲ್ಲ. ಪಕ್ಷ ತಪ್ಪು ದಾರಿಯಲ್ಲಿ ಹೋಗುತ್ತಿದೆ ಹೀಗಾಗಿ ಪಕ್ಷ ಉಳಿಸುವ ಕೆಲಸ ಮಾಡುತ್ತಿದ್ದೇನೆ. ಪಕ್ಷ ಹಾಗೂ ಹೈಕಮಾಂಡ್ ಏನು ತೀರ್ಮಾನ ತೆಗೆದುಕೊಳ್ಳುತ್ತದೋ ತೆಗೆದುಕೊಳ್ಳಲಿ. ಯಡಿಯೂರಪ್ಪನವರು ಇಲಾಖೆಯ ಕೆಲಸಗಳಿಗೆಂದು 1,299 ಕೋಟಿ ಹಣವನ್ನು ನನ್ನ ಗಮನಕ್ಕೆ ತರದೇ ಬಿಡುಗಡೆ ಮಾಡಿರುವುದು ಸರಿಯಿಲ್ಲ. ಆ ದೃಷ್ಟಿಯಿಂದ ಪತ್ರ ಬರದಿದ್ದೇನೆ ಎಂದು ಸಚಿವ ಈಶ್ವರಪ್ಪ ತಿಳಿಸಿದ್ದಾರೆ.










