ಬೆಳಗಾವಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ ಹಾಗೂ ಮುಖಂಡರ ಜೊತೆ ಬೆಳಗಾವಿ ಜಿಲ್ಲಾಡಳಿತ ಇಂದು ಮಧ್ಯಾಹ್ನ ತುರ್ತು ಸಭೆ ನಡೆಸಿತು. ಸಂಧಾನ ಸಭೆ ಯಶಸ್ವಿಯಾದ ಬೆನ್ನಲ್ಲೇ ಬೆಳಗಾವಿ ಡಿಸಿ ಮಹಮ್ಮದ್ ರೋಷನ್ ಪಂಚಮಸಾಲಿ ಹೋರಾಟಕ್ಕೆ ಅನುಮತಿ ನೀಡಿದರು. ಪ್ರತಿಭಟನೆಯಲ್ಲಿ ಟ್ರ್ಯಾಕ್ಟರ್ ಬಳಕೆ ಮಾಡದಿರಲು ಸ್ವಾಮೀಜಿ ಒಪ್ಪಿಗೆ ಸೂಚಿಸಿದ್ದಾರೆ. ಪಂಚಮಸಾಲಿ ಸ್ವಾಮೀಜಿ ಅವರ ಜೊತೆ ಒಳ್ಳೆಯ ಚರ್ಚೆ ನಡೆದಿದೆ. ಸಾರ್ವಜನಿಕರಿಗೆ ತೊಂದರೆ ಆಗದಂತೆ ಪ್ರತಿಭಟನೆ ಮಾಡಲು ಮನವಿ ಮಾಡಲಾಗಿದೆ ಎಂದು ತಿಳಿಸಿದರು. ಎಷ್ಟು ಜನ ಸೇರುತ್ತಾರೆ ಎನ್ನುವ ಮಾಹಿತಿ ಸ್ವಾಮೀಜಿ ನೀಡಿದ್ದಾರೆ. ಟ್ಯಾಕ್ಟರ್ ಬರುವುದರಿಂದ ಸಮಸ್ಯೆ ಆಗುತ್ತದೆ ಎಂದು ಮನವರಿಕೆ ಮಾಡಲಾಗಿದೆ. ಪೆಂಡಾಲ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಮನವಿ ಮಾಡಿದ್ದಾರೆ. ಟ್ರ್ಯಾಕ್ಟರ್ ಬದಲು ಕ್ರೂಸರ್ ವಾಹನ ಬಳಸಲು ಅನುಮತಿ ನೀಡಲಾಗಿದೆ ಎಂದು ಹೇಳಿದರು. ಲಿಂಗಾಯತ ಪಂಚಮಸಾಲಿಗೆ 2ಎ ಮೀಸಲಾತಿಗೆ ಆಗ್ರಹಿಸಿ ಮಂಗಳವಾರ ಸುವರ್ಣಸೌಧಕ್ಕೆ ಮುತ್ತಿಗೆ ಹಾಕಲು ಪಂಚಮಸಾಲಿ ಸಮುದಾಯ ಮುಂದಾಗಿತ್ತು. ಬಸವಜಯ ಮೃತ್ಯುಂಜಯ ಸ್ವಾಮೀಜಿ ಡಿಸೆಂಬರ್ 10 ರಂದು ಟ್ರ್ಯಾಕ್ಟರ್ ಮೂಲಕ ಸುವರ್ಣ ವಿಧಾನಸೌಧ ಮುತ್ತಿಗೆ ಹಾಕಲು ಕರೆ ನೀಡಿದ್ದರು. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಕಾರಣ ನೀಡಿ ಬೆಳಗಾವಿ ಜಿಲ್ಲಾಧಿಕಾರಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಪ್ರತಿಭಟನೆಯ ಉದ್ದೇಶದಿಂದ ಟ್ಯಾಕ್ಟರ್ ಹಾಗೂ ಇತರೆ ವಾಹನಗಳು ಬೆಳಗಾವಿ ನಗರಕ್ಕೆ ಬಾರದಂತೆ ನಿಷೇಧಿಸಿ ಆದೇಶ ಹೊರಡಿಸಿದ್ದರು. ಈ ಆದೇಶಕ್ಕೆ ಭಾರೀ ವಿರೋಧ ವ್ಯಕ್ತವಾದ ಬೆನ್ನಲ್ಲೇ ಈಗ ಜಿಲ್ಲಾಡಳಿತ ಅನುಮತಿ ನೀಡಿದೆ.










