ಚಂಡೀಗಢ : ಪಂಜಾಬ್ ನ ಪಟಿಯಾಲದಲ್ಲಿ ನಡೆದ ಘರ್ಷಣೆಗೆ ಸಂಬಂಧಿಸಿದಂತೆ ಪಂಜಾಬ್ ಸರ್ಕಾರ ಇಂದು ರಾಜ್ಯ ಪೊಲೀಸರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದು, ಹಿಂಸಾಚಾರವನ್ನು ನಿಯಂತ್ರಿಸುವಲ್ಲಿ ವಿಫಲರಾದ ಪೊಲೀಸ್ ಇಲಾಖೆಯ ಮೂವರು ಉನ್ನತ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ.
ಜೊತೆಗೆ ಗಲಭೆಯನ್ನು ನಿಯಂತ್ರಿಸಲು ನಗರದಲ್ಲಿ ನಿನ್ನೆ ಸಂಜೆ 7 ಗಂಟೆಯಿಂದ ಬೆಳಗ್ಗೆ 6 ಗಂಟೆಯವರೆಗೆ ಕರ್ಫ್ಯೂ ಜಾರಿ ಮಾಡಲಾಗಿತ್ತು. ಜಿಲ್ಲೆಯಲ್ಲಿ ಇಂದು ಬೆಳಗ್ಗೆ 9:30 ರಿಂದ ಧ್ವನಿ ಕರೆಗಳನ್ನು ಹೊರತುಪಡಿಸಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್ಎಂಎಸ್ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ವದಂತಿ ಹರಡುವುದನ್ನು ತಡೆಯಲು ಸರ್ಕಾರ ಈ ನಿರ್ಧಾರ ಕೈಗೊಂಡಿದೆ.
ಕಾನೂನು ಸುವ್ಯವಸ್ಥೆ ಕಾಪಾಡಲು, ವದಂತಿಗಳನ್ನು ಹರುಡುವುದನ್ನು ನಿಯಂತ್ರಿಸುವುದಕ್ಕಾಗಿ ಇಂಟರ್ನೆಟ್ ಸೇವೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ವಿಡಿಯೋ ತುಣುಕಿನ ಆಧಾರದ ಮೇಲೆ ಕ್ರಮ ಕೈಗೊಳ್ಳಲಾಗುವುದು ಎಂದು ಪಟಿಯಾಲ ಉಪ ಕಮಿಷನರ್ ಪಟಿಯಾಲ ಡೆಪ್ಯುಟಿ ಕಮಿಷನರ್ ಹೇಳಿದ್ದಾರೆ.
ಏನಿದು ಘಟನೆ : ಪಟಿಯಾಲದಲ್ಲಿರುವ ಕಾಳಿ ಮಾತಾ ದೇವಸ್ಥಾನದ ಬಳಿ ಶಿವಸೇನೆ ಕಾರ್ಯಕರ್ತರು ಖಲಿಸ್ತಾನ್ ವಿರೋಧಿ ಮೆರವಣಿಗೆ ನಡೆಸುತ್ತಿದ್ದರು. ಇದೇ ಕಾರಣಕ್ಕಾಗಿ ಸಿಖ್ ಸಂಘಟನೆಗಳು ಮತ್ತು ಶಿವಸೇನೆ ಬೆಂಬಲಿಗರ ನಡುವೆ ಘರ್ಷಣೆ ಸಂಭವಿಸಿತ್ತು. ಹೀಗಾಗಿ, ಎರಡೂ ಕಡೆಯ ಗುಂಪುಗಳನ್ನು ಚದುರಿಸಿ ಪರಿಸ್ಥಿತಿ ನಿಭಾಯಿಸಲು ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಬೇಕಾಯಿತು.










