ಬೆಂಗಳೂರು : ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ಕುರಿತು ಟ್ವೀಟ್ ಮಾಡಿದ್ದ ವಿಷಯಕ್ಕೆ ಸಂಬಂಧಿಸಿದಂತೆ ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತಮ್ಮ ಟ್ವಿಟರ್ ಮೂಲಕ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದಾರೆ. “ಪವಿತ್ರ ಸಿದ್ದಗಂಗಾ ಮಠವನ್ನು ರಾಜಕೀಯಕ್ಕೆ ಎಳೆದ ಸಿದ್ದರಾಮಯ್ಯ ಅವರು ತಮ್ಮ ಕ್ಷುಲ್ಲಕ ಮನಸ್ಥಿತಿಯನ್ನು ಪ್ರದರ್ಶಿಸಿದ್ದಾರೆ. ಜನರಿಗೆ ರಾಷ್ಟ್ರದ ಆಗುಹೋಗುಗಳ ಬಗ್ಗೆ ತಿಳಿಸುವುದು ಒಬ್ಬ ಪ್ರಧಾನಿಯ ಕರ್ತವ್ಯ. ದೇಶದ ಪ್ರಧಾನಿ ರಾಜ್ಯಕ್ಕೆ ಭೇಟಿ ನೀಡಿದಾಗ ಅಭಿವೃದ್ಧಿ ವಿಚಾರಗಳ ಕುರಿತು ಗಮನ ಸೆಳೆಯುವ ಬದಲು ವಿರೋಧ ಪಕ್ಷಗಳು ಹುರುಳಿಲ್ಲದ ಆರೋಪಗಳ ಮೂಲಕ ವೃಥಾ ಟೀಕೆಗಳನ್ನು ಮಾಡುತ್ತಿರುವುದು ಅವರ ವೈಚಾರಿಕ ದಿವಾಳಿತನಕ್ಕೆ ಸಾಕ್ಷಿ. ಎಂದು ಟ್ವೀಟ್ ಮಾಡಿದ್ದಾರೆ.
ನಿನ್ನೆ ಪ್ರಧಾನಿ ನರೇಂದ್ರ ಮೋದಿ ಅವರು ಸಿದ್ದಗಂಗಾ ಮಠದಲ್ಲಿ ಮಕ್ಕಳನ್ನು ಉದ್ದೇಶಿಸಿ ಮಾಡಿದ್ದ ಭಾಷಣ ಕುರಿತು ಎಳೆಯ ಮಕ್ಕಳನ್ನು ಕೂರಿಸಿಕೊಂಡು ಕೊಳಕು ರಾಜಕೀಯದ ಭಾಷಣ ಮಾಡಿದ ನರೇಂದ್ರ ಮೋದಿ ಅವರೇ, ನಿಮ್ಮನ್ನು ಆ ಪವಿತ್ರ ನೆಲ ಕ್ಷಮಿಸದು ಎಂದು ಟ್ವೀಟ್ ಮಾಡಿದ್ದರು.










