ಬೆಂಗಳೂರು : ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಬಂಧನಕ್ಕೊಳಗಾಗಿರುವ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿಯಾಗಿದ್ದ ಅಮೃತ್ ಪೌಲ್ ಅವರನ್ನು ನ್ಯಾಯಾಲಯ ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿದೆ.
ಅಮೃತ್ ಪೌಲ್ ಅವರ ಸಿಐಡಿ ಕಸ್ಟಡಿ ಅವಧಿ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ಇಂದು ಅವರನ್ನು 1ನೇ ಎಸಿಎಂಎಂ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನ್ಯಾಯಾಲಯವು ಮತ್ತೆ ಮೂರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ ಆದೇಶಿಸಿದೆ.
ಆರೋಪಿ ಶಾಂತಕುಮಾರ್ ಹಾಗೂ ಎಡಿಜಿಪಿ ಮಧ್ಯೆ 1.36 ಕೋಟಿ ಹಣ ವರ್ಗಾವಣೆ ಆಗಿದೆ. ಮೊಬೈಲ್ ಡಾಟಾ ಅಳಿಸಿ ಹಾಕಲಾಗಿದೆ. ಇನ್ನೂ ಐದು ದಿನ ವಶಕ್ಕೆ ನೀಡುವಂತೆ ಸಿಐಡಿ ಪರ ವಕೀಲರು ಕೋರಿದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಸತತ ಮೂರು ಬಾರಿ ವಿಚಾರಣೆ ಎದುರಿಸಿದ್ದ ಅಮೃತ್ ಪೌಲ್ ರನ್ನು ಕಳೆದ ಜುಲೈ 4ರಂದು ಸಿಐಡಿ ಅಧಿಕೃತವಾಗಿ ಬಂಧಿಸಿತ್ತು. ಅಮೃತ್ ಪೌಲ್ 25 ಅಭ್ಯರ್ಥಿಗಳ ಜೊತೆ 30 ಲಕ್ಷ ರೂಪಾಯಿ ಡೀಲ್ ಮಾಡಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಮತ್ತಷ್ಟು ವಿಚಾರಣೆ ನಡೆಸಲು ಸಿಐಡಿ ಅವರನ್ನು ಬಂಧಿಸಿತ್ತು.










