ಬೆಂಗಳೂರು : ಪೌರತ್ವ ತಿದ್ದುಪಡಿ ಮಸೂದೆ ವಿರೋಧಿಸಿ ಗುರುವಾರ ಬೆಂಗಳೂರಿನ ಟೌನ್ ಹಾಲ್ ಬಳಿ ನಡೆಯುತ್ತಿದ್ದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು. ಈ ವೇಳೆ ಪ್ರತಿಭಟನಾಕಾರರನ್ನು ಹತೋಟಿಗೆ ತರಲು ಬೆಂಗಳೂರು ಡಿಸಿಪಿ ಚೇತನ್ ಸಿಂಗ್ ರಾಥೋಡ್ ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ ಬಳಿಕ ಪ್ರತಿಭಟನಾಕಾರರನ್ನು ಸ್ಥಳದಿಂದ ಕಳುಹಿಸಲು ರಾಷ್ಟ್ರಗೀತೆಯನ್ನು ಹಾಡಿದ್ದು, ಸದ್ಯ ಡಿಸಿಪಿ ಹಾಡಿರುವ ರಾಷ್ಟ್ರಗೀತೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಡಿಸಿಪಿ ಚೇತನ್ ಸಿಂಗ್ ಅವರು ಪ್ರತಿಭಟನಾಕಾರರಲ್ಲಿ ದೇಶಭಕ್ತಿ ತುಂಬುವ ಮಾತುಗಳನ್ನಾಡಿ ಪೌರತ್ವ ಕಾಯ್ದೆ ಬಗ್ಗೆ ತಿಳಿಹೇಳುವ ಪ್ರಯತ್ನ ಮಾಡಿದರು. ಕೊನೆಯಲ್ಲಿ ಡಿಸಿಪಿ ರಾಷ್ಟ್ರಗೀತೆ ಹಾಡುತ್ತಿದ್ದಂತೆ ಎಲ್ಲರೂ ತಮ್ಮ ಸ್ಥಳದಿಂದ ಎದ್ದು ನಿಂತು ಗೌರವ ಸೂಚಿಸಿದ್ದಾರೆ. ಬಳಿಕ ಪ್ರತಿಭಟನೆಯನ್ನು ಕೈಬಿಡುವಂತೆ ಒಪ್ಪಿಕೊಂಡು ಕೆಲವೇ ಕ್ಷಣಗಳಲ್ಲಿ ಪೊಲೀಸರ ಬಳಿ ವಾದ ಮಾಡದೆ ತಾವು ಇದ್ದ ಸ್ಥಳವನ್ನು ಖಾಲಿ ಮಾಡಿದ್ದರು. ಸದ್ಯ ಡಿಸಿಪಿ ಹಾಡಿರುವ ರಾಷ್ಟ್ರಗೀತೆ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಎಲ್ಲೆಡೆ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಪೌರತ್ವ ತಿದ್ದುಪಡಿ ವಿರೋಧಿಸಿ ಇಂದು ಕೂಡಾ ಪ್ರತಿಭಟನೆ ನಡೆಯುವ ಸಾಧ್ಯತೆ ಇದ್ದು, ಬೆಂಗಳೂರು ನಗರಾದ್ಯಂತ ನಿಷೇಧಾಜ್ಞೆ ಮುಂದುವರಿಯಲಿದೆ.










