ಬೆಂಗಳೂರು : ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸಚಿವ ಸಂಪುಟ ರಚನೆ ಕುರಿತು ದೆಹಲಿಯಲ್ಲಿ ವರಿಷ್ಠರ ಜೊತೆ ಮಾತುಕತೆ ನಡೆಸುತ್ತಿದ್ದರೆ, ಇತ್ತ ಬೊಮ್ಮಾಯಿ ಸಂಪುಟ ಸೇರಲು ಶಾಸಕರು ಮಾಜಿ ಸಿಎಂ ಯಡಿಯೂರಪ್ಪ ನಿವಾಸದಲ್ಲಿ ಲಾಬಿ ನಡೆಸುತ್ತಿದ್ದಾರೆಂದು ಹೇಳಲಾಗುತ್ತಿದೆ.
ಇಂದು, ತೀರ್ಥಹಳ್ಳಿ ಶಾಸಕ ಅರಗ ಜ್ಞಾನೇಂದ್ರ ಹಾಗೂ ಹುನಗುಂದ ಶಾಸಕ ದೊಡ್ಡನಗೌಡ ಪಾಟೀಲ್ ಬೆಂಬಲಿಗರ ಜೊತೆ ಆಗಮಿಸಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಸಂಪುಟದಲ್ಲಿ ಅವಕಾಶಕ್ಕೆ ಮನವಿ ಮಾಡಿದರು.
ಬಳಿಕ ಮಾತನಾಡಿದ ಅರಗ ಜ್ಞಾನೇಂದ್ರ ಅವರು, ಯಡಿಯೂರಪ್ಪನವರ ಭೇಟಿಯಲ್ಲಿ ವಿಶೇಷವೇನಿಲ್ಲ. ನನ್ನನ್ನು ಸಚಿವ ಸಂಪುಟಕ್ಕೆ ಸೇರಿಸದಿರಲು ಯಾವುದೇ ಕಾರಣಗಳು ಇಲ್ಲ. ಯಡಿಯೂರಪ್ಪನವರಿಗೆ ನನ್ನ ಮೇಲೆ ಅನುಕಂಪ ಇದೆ. ನನ್ನನ್ನು ಬಿಎಸ್ ವೈ ಗುರುತಿಸುತ್ತಾರೆ, ಸಂಘ ಸಹ ಗುರುತಿಸುತ್ತದೆ. ಈ ಬಾರಿ ಸಚಿವನಾಗುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.










