ದಾವಣಗೆರೆ : ಕೆಎಸ್ಆರ್ಟಿಸಿ ಬಸ್ ಹಾಗೂ ಸ್ವಿಫ್ಟ್ ಕಾರ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರ್ ನಲ್ಲಿದ್ದ ಮೂರು ಮಹಿಳೆಯರು ಸೇರಿದಂತೆ ನಾಲ್ವರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ನ್ಯಾಮತಿ ತಾಲೂಕಿನ ಸವಳಂಗ ಬಳಿ ಅಪಘಾತ ಸಂಭವಿಸಿದೆ.
ಕಾರ್ ಚಾಲಕ ಸುನೀಲ್ (30), ದ್ರಾಕ್ಷಾಯಿಣಮ್ಮ (40), ಸುಮಾ (45) ಮತ್ತು ಶಾರದಮ್ಮ (65) ಸಾವನ್ನಪ್ಪಿದವರು. ಮೃತರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಎಡೇಹಳ್ಳಿ ಗ್ರಾಮದ ಮೂಲದವರು ಎಂದು ತಿಳಿದು ಬಂದಿದ್ದು, ಜಿಲ್ಲೆಯ ನ್ಯಾಮತಿ ತಾಲೂಕಿನ ಹಳೇಜೋಗ ಗ್ರಾಮದಲ್ಲಿನ ಕಾರ್ಯಕ್ರಮಯೊಂದಕ್ಕೆ ಆಗಮಿಸಿದ್ದ ವೇಳೆ ಅಪಘಾತ ಸಂಭವಿಸಿದೆ. ಇನ್ನು ಕಾರಿನಲ್ಲಿದ್ದ ಆಶಾ ಎಂಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಗಿದೆ.
ಸ್ಥಳಕ್ಕೆ ನ್ಯಾಮತಿ ಠಾಣೆಯ ಸಿಪಿಐ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಅಂಬುಲೆನ್ಸ್ ಮೂಲಕ ರವಾನಿಸಲಾಗಿದೆ.










