ಮಂಗಳೂರು : ನಗರದಲ್ಲಿ 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಕಠಿಣ ಶಿಕ್ಷೆಗೆ ಒತ್ತಾಯಿಸಿ ಚಾರ್ವಿ ನಿರಂಜನ್ ಎಂಬ ಬಾಲಕಿ ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದಳು.
ಉಳಾಯಿಬೆಟ್ಟು ಎಂಬಲ್ಲಿ 8 ವರ್ಷದ ಬಾಲಕಿಯೊಬ್ಬಳ ಮೇಲೆ ನಾಲ್ವರು ಕಾಮುಕರು ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿತ್ತು. ಈ ಪ್ರಕರಣ ಸಂಬಂಧ ಈಗಾಗಲೇ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ಉಳಾಯಿಬೆಟ್ಟು ಸಮೀಪದ ಪರಾರಿಯಲ್ಲಿನ ಹಂಚಿನ ಕಾರ್ಖಾನೆಯ ಬಳಿ ಚರಂಡಿಯಲ್ಲಿ ಪತ್ತೆಯಾದ 8 ವರ್ಷದ ಬಾಲಕಿಯ ಮೃತ ದೇಹ ಹಾಗೂ ಅತ್ಯಾಚಾರವೆಸಗಿದ ಪ್ರಕರಣದಲ್ಲಿ ಸಿಲುಕಿದ ಆರೋಪಿಗಳ ಬಂಧನವಾಗಿದ್ದು ಸದ್ರಿಯ ಪ್ರಕರಣದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕಾಗಿ ಈ ಮೂಲಕ ಕೇಳಿಕೊಳ್ಳುತ್ತೇನೆ. ಇನ್ನಾದರೂ ನನ್ನಂತಹ ಸಣ್ಣ ಹೆಣ್ಣು ಮಕ್ಕಳ ಮೇಲೆ ಇಂತಹ ಘಟನೆಗಳು ಮರುಕಳಿಸದಂತೆ ಕ್ರಮ ಕೈಗೊಳ್ಳುವಂತೆ ಪತ್ರದಲ್ಲಿ ಬಾಲಕಿ ಉಲ್ಲೇಖಿಸಿದ್ದಾಳೆ.










