ಬೆಂಗಳೂರು: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಪಕ್ಷದವರು ಮೈತ್ರಿ ಮಾಡಿಕೊಳ್ಳುತ್ತಾರೋ ಅಥವಾ ಪ್ರತ್ಯೇಕವಾಗಿ ಸ್ಪರ್ಧಿಸುತ್ತಾರೋ ನಮಗೆ ಸಂಬಂಧಿಸದ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.
ಲೋಕಸಭಾ ಚುನಾವಣೆಗಾಗಿ ಬಿಜೆಪಿ-ಜೆಡಿಎಸ್ ರಾಜ್ಯದಲ್ಲಿ 4 ಸೀಟುಗಳಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಎರಡು ಪಕ್ಷಗಳ ನಾಯಕರ ನಡುವೆ ಮಾತುಕತೆ ಶುರುವಾಗುತ್ತಿದ್ದಂತೆಯೇ ಕರ್ನಾಟಕದ ರಾಜಕೀಯ ವಲಯಗಳಲ್ಲಿ ಚರ್ಚೆಗಳು ಸಹ ಜೋರಾಗಿ ನಡೆಯುತ್ತಿವೆ. ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ಸಿಎಂ, ಅವರು ಮೈತ್ರಿ ಮಾಡಿಕೊಳ್ಳುತ್ತಾರೋ ಅಥವಾ ಪ್ರತ್ಯೇಕವಾಗಿ ಸ್ಪರ್ಧಿಸುತ್ತಾರೋ ತಮಗೆ ಸಂಬಂಧಿಸದ ವಿಷಯ ಮತ್ತು ಕಾಂಗ್ರೆಸ್ ಅದರ ಬಗ್ಗೆ ಯೋಚಿಸುವ ಅಗತ್ಯವೂ ಇಲ್ಲ, ಎಂದು ಸಿದ್ದರಾಮಯ್ಯ ಹೇಳಿದರು.
ನಾವು ಜನರ ಬಳಿಗೆ ಹೋಗಿ ಮತ ಯಾಚಿಸುತ್ತೇವೆ, ರಾಜ್ಯದ ಜನತೆ ನಮ್ಮ ಪರವಾಗಿದ್ದಾರೆ, ವಿಧಾನ ಸಭಾ ಚುನಾವಣೆಯಲ್ಲಿ ನಮ್ಮ ಕೈ ಹಿಡಿದಂತೆ ಲೋಕಸಭಾ ಚುನಾವಣೆಯಲ್ಲೂ ಗೆಲ್ಲಿಸಲಿದ್ದಾರೆ ಎಂದು ಸಿದ್ದರಾಮಯ್ಯ ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಲು ಮುಂದಾಗಿದೆ. ಈ ನಿಟ್ಟಿನಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದು, ನಾಲ್ಕು ಕ್ಷೇತ್ರಗಳನ್ನು ಜೆಡಿಎಸ್ಗೆ ನೀಡಲು ಅಮಿತ್ ಶಾ ಒಪ್ಪಿಕೊಂಡಿದ್ದಾರೆ ಎಂದು ಹೇಳಿದ್ದಾರೆ. ಇದೀಗ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಯನ್ನು ಕಾಂಗ್ರೆಸ್ ನಾಯಕರು ಟೀಕಿಸಿದ್ದಾರೆ.










