ಹುಬ್ಬಳ್ಳಿ: ಭಾರತದಲ್ಲಿ ವಕ್ಫ್ ಕಾನೂನು ತಪ್ಪಾಗಿದೆ. ಇದನ್ನು ಸಂಪೂರ್ಣವಾಗಿ ತೆಗೆದುಹಾಕುವುದು ಸೂಕ್ತ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಧಾರವಾಡದಲ್ಲಿ ಮಾತನಾಡಿದ ಅವರು, ನೆಹರೂ ಕಾಲದಲ್ಲಿ ಕಾಂಗ್ರೆಸ್ ಏಕೆ ವಕ್ಫ್ ಕಾನೂನನ್ನು ಜಾರಿಗೊಳಿಸಿತು. ದೇಶದ ಯಾವ ವಿಭಾಗಗಳಿಗೂ ಇರದ ಅಧಿಕಾರವನ್ನು 2013ರಲ್ಲಿ ವಕ್ಫ್ ಮಂಡಳಿಗೆ ನೀಡಲಾಗಿದೆ. ಮಂಡಳಿಯ ಅಧಿಸೂಚನೆಯನ್ನು ವಿಚಾರಣೆ ನಡೆಸುವ ಅಧಿಕಾರ ಸುಪ್ರೀಂ ಕೋರ್ಟ್ಗೂ ಇಲ್ಲ ಎಂದು ಮಂಡಳಿಯವರು ಹೇಳಿದ್ದಾರೆ ಎಂದು ತಿಳಿಸಿದರು. ಕಾಂಗ್ರೆಸ್ ಮುಸ್ಲಿಂ ತುಷ್ಟೀಕರಣದಲ್ಲಿ ತೊಡಗಿದೆ. ವಕ್ಫ್ ಆಸ್ತಿ ನೋಟಿಸ್ ಹಿಂದೆ ಕಾಂಗ್ರೆಸ್ ಸರ್ಕಾರ ಮತ್ತು ಸಚಿವ ಜಮೀರ್ ಅಹಮದ್ ಖಾನ್ ಕುಮ್ಮಕ್ಕು ಇದೆ. ವಕ್ಫ್ ಆಸ್ತಿ ಎಂದು ರೈತರಿಗೆ ನೋಟಿಸ್ ನೀಡಿದ ತಹಶೀಲ್ದಾರ್ ಅಮಾನತಿಗೆ ವಿಜಯಪುರ ಜಿಲ್ಲಾಧಿಕಾರಿ ಕ್ರಮ ವಹಿಸಬೇಕು. ಪ್ರಕರಣ ದಾಖಲಿಸಬೇಕು ಎಂದು ಅವರು ಒತ್ತಾಯಿಸಿದರು.
ಇನ್ನು ಮುಂದಿನ ದಿನಗಳಲ್ಲಿ ವಕ್ಫ್ ಬೋರ್ಡ್ ನಮ್ಮ ಮನೆಗಳು ಮತ್ತು ಜಮೀನಿನ ಮಾಲೀಕತ್ವವನ್ನು ಪಡೆದರೆ ಆಶ್ಚರ್ಯವಿಲ್ಲ. ವಕ್ಫ್ ಬೋರ್ಡ್ಗಳಿಗೆ ಅನಿಯಮಿತ ಅಧಿಕಾರ ನೀಡುವ ಮೂಲಕ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣ ಮಾಡುತ್ತಿದೆ ಎಂದು ಆರೋಪಿಸಿದ ಅವರು, ಇದು ಯಾವುದೇ ರೂಪದಲ್ಲಿ ಸ್ವೀಕಾರಾರ್ಹವಲ್ಲ. ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಮತ್ತು ಕಾಂಗ್ರೆಸ್ ರೈತರ ಆಸ್ತಿಗಳು, ದೇವಸ್ಥಾನಗಳು, ಮಠಗಳು ಮತ್ತು ಬಡ ಮುಸ್ಲಿಮರ ಭೂಮಿಯನ್ನು ವಕ್ಫ್ ಮಂಡಳಿ ವಶಪಡಿಸಿಕೊಳ್ಳಲು ಬೆಂಬಲಿಸಿದೆ ಎಂದು ಅವರು ಹೇಳಿದ್ದಾರೆ. ಧಾರವಾಡ ಜಿಲ್ಲೆಯಲ್ಲಿ ಭೂ ದಾಖಲೆಗಳನ್ನು ತಿದ್ದುಪಡಿ ಮಾಡಿ ರೈತರ ಜಮೀನುಗಳನ್ನು ವಕ್ಫ್ ಆಸ್ತಿ ಎಂದು ಘೋಷಿಸಿರುವ ತಹಶೀಲ್ದಾರ್ ಹಾಗೂ ಅಧಿಕಾರಿಗಳನ್ನು ರಾಜ್ಯ ಸರ್ಕಾರ ಕೂಡಲೇ ಅವರ ಅಧಿಕಾರದಿಂದ ಅಮಾನತುಗೊಳಿಸಬೇಕು ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.










