ನವದೆಹಲಿ : ಭಾರತೀಯ ವಿದ್ಯಾರ್ಥಿಗಳನ್ನು ಉಕ್ರೇನ್ ಒತ್ತೆಯಾಳಾಗಿ ಇರಿಸಿಕೊಂಡಿದೆ ಎಂದು ರಷ್ಯಾ ಗಂಭೀರ ಆರೋಪ ಮಾಡಿತ್ತು. ಆದರೆ ರಷ್ಯಾ ಆರೋಪವನ್ನು ಭಾರತ ನಿರಾಕರಿಸಿದೆ.
ರಷ್ಯಾ ಆರೋಪ ಕುರಿತು ಸ್ಪಷ್ಟನೆ ನೀಡಿರುವ ಭಾರತದ ವಿದೇಶಾಂಗ ಸಚಿವಾಲಯವು, ಭಾರತದ ವಿದ್ಯಾರ್ಥಿಗಳನ್ನು ಒತ್ತೆಯಾಗಿರುವ ಬಗ್ಗೆ ಯಾವುದೇ ವರದಿ ಇಲ್ಲ. ಉಕ್ರೇನ್ ನಲ್ಲಿರುವ ನಮ್ಮ ರಾಯಭಾರಿ ಅಲ್ಲಿನ ವಿದ್ಯಾರ್ಥಿಗಳೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದೆ. ಅಲ್ಲದೇ, ಉಕ್ರೇನ್ ಅಧಿಕಾರಿಗಳು ನಮಗೆ ಸಹಕಾರ ನೀಡುತ್ತಿದ್ದಾರೆ. ಅನೇಕ ವಿದ್ಯಾರ್ಥಿಗಳು ಖಾರ್ಕಿವ್ ನಿಂದ ಸುರಕ್ಷಿತವಾಗಿ ಬಂದಿದ್ದಾರೆ. ಖಾರ್ಕಿವ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳ ಸ್ಥಳಾಂತರಕ್ಕೆ ವಿಶೇಷ ರೈಲು ವ್ಯವಸ್ಥೆ ಮಾಡುವಂತೆ ಉಕ್ರೇನ್ ಅಧಿಕಾರಿಗಳಿಗೆ ಮನವಿ ಮಾಡಿದ್ದೇವೆ ಎಂದು ವಿದೇಶಾಂಗ ಸಚಿವಾಲಯದ ವಕ್ತಾರ ಅರಿಂದಮ್ ಬಾಗ್ಚಿ ತಿಳಿಸಿದ್ದಾರೆ.
ರಷ್ಯಾ ಹೇಳಿದ್ದೇನು? : ಉಕ್ರೇನ್-ಪೋಲಿಷ್ ಗಡಿಯಲ್ಲಿ ಭಾರತೀಯರ ವಿದ್ಯಾರ್ಥಿಗಳನ್ನು ಉಕ್ರೇನ್ ಭದ್ರತಾ ಪಡೆ ಒತ್ತೆಯಾಳಾಗಿ ಇಟ್ಟುಕೊಂಡಿದೆ. ರಷ್ಯಾಕ್ಕೆ ಬರುವುದನ್ನು ತಡೆಯಲೆಂದೇ ಇದನ್ನು ಮಾಡಲಾಗುತ್ತಿದೆ. ಆದರೂ, ಭಾರತೀಯರ ಸುರಕ್ಷತೆಗೆ ಅಗತ್ಯವಾದ ಎಲ್ಲ ಕ್ರಮಗಳನ್ನು ರಷ್ಯಾ ಸೇನೆಯು ತೆಗೆದುಕೊಳ್ಳಲಿದೆ ಎಂದು ರಷ್ಯಾದ ರಾಯಭಾರಿ ಟ್ವೀಟ್ ಮಾಡಿದ್ದಾರೆ.










