ಚಿಕ್ಕಮಗಳೂರು: ಅಂತರಾಷ್ಟ್ರೀಯ ಯೋಗ ದಿನವನ್ನು ನಗರದ ಶ್ರೀ ಭುವನೇಂದ್ರ ವಿದ್ಯಾಸಂಸ್ಥೆಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಇಂದು ಸಡಗರ ಸಂಭ್ರಮದಿಂದ ಆಚರಿಸಿದರು.
ಯೋಗ ದಿನದ ಅಂಗವಾಗಿ ಬೆಳಿಗ್ಗೆ ನೂರಾರು ವಿದ್ಯಾರ್ಥಿಗಳು ಶಾಲೆಯಲ್ಲಿ ಸಾಮೂಹಿಕವಾಗಿ ಸೂರ್ಯ ನಮಸ್ಕಾರ ಸೇರಿದಂತೆ ಒಂದು ಗಂಟೆಗೂ ಅಧಿಕ ಕಾಲ ವಿವಿಧ ಯೋಗಾಸನಗಳನ್ನು ಮಾಡಿದರು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಬಿ.ಹೆಚ್. ನರೇಂದ್ರ ಪೈ ಯೋಗ ಮನುಷ್ಯನನ್ನು ನಿರೋಗಿಯನ್ನಾಗಿಸುತ್ತದೆ. ಪ್ರತಿನಿತ್ಯ ಯೋಗಾಭ್ಯಾಸ ಮಾಡುವುದರಿಂದ ಮಾನಸಿಕ, ದೈಹಿಕ ಆರೋಗ್ಯ ಲಭಿಸುತ್ತದೆ ಎಂದರು.
ವಿದ್ಯಾರ್ಥಿಗಳು ಯೋಗಾಭ್ಯಾಸವನ್ನು ಯೋಗ ದಿನಕ್ಕೆ ಮಾತ್ರ ಸೀಮಿತಗೊಳಿಸದೆ ಪ್ರತಿನಿತ್ಯ ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು. ಪ್ರಾಂಶುಪಾಲ ಕೆ.ಪಿ. ದೇವರಾಜ್, ಯೋಗ ಶಿಕ್ಷಕಿ ಕನಕ ಉಪಸ್ಥಿತರಿದ್ದರು.










