ಬೆಂಗಳೂರು : ಮಹಾಮಾರಿ ಕೊರೊನಾ ಸೋಂಕಿನಿಂದ ಇತ್ತೀಚೆಗೆ ರಾಜ್ಯಸಭಾ ಸದಸ್ಯರಾಗಿ ಆಯ್ಕೆಗೊಂಡಿದ್ದ ಅಶೋಕ್ ಗಸ್ತಿ(55) ಅವರು ವಿಧಿವಶರಾಗಿದ್ದಾರೆ. ಮೂಲತಃ ರಾಯಚೂರು ಜಿಲ್ಲೆಯವರಾದ ಅಶೋಕ್ ಗಸ್ತಿ ಅವರು ಸೆ.2ರಂದು ಕೊರೊನಾ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ 15 ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ರಾತ್ರಿ ಆಸ್ಪತ್ರೆಯಲ್ಲೇ ಮೃತಪಟ್ಟಿದ್ದಾರೆ. ಅಶೋಕ್ ಗಸ್ತಿ ಅವರು ಕೊರೊನಾ ಸೋಂಕಿನ ಜೊತೆಗೆ ನ್ಯುಮೋನಿಯಾದಿಂದ ಬಳಲುತ್ತಿದ್ದ ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನಿಡಲಾಗುತ್ತಿತ್ತು. ಆದರೆ ಅವರು ಬಹು ಅಂಗಾಂಗ ವೈಫಲ್ಯದಿಂದ ನಿಧನರಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳಿಂದ ತಿಳಿದು ಬಂದಿದೆ.
ಅಶೋಕ್ ಗಸ್ತಿ ಅವರು ರಾಯಚೂರು ಬಳ್ಳಾರಿ ಕೊಪ್ಪಳ ಪ್ರಭಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ರಾಯಚೂರು ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾಗಿ, ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ ಕಾರ್ಯ ನಿರ್ವಹಿಸಿದ್ದರು.










