ಬೆಂಗಳೂರು : ರಾಜ್ಯದಲ್ಲಿ ಮಹಾಮಾರಿ ಕೊರೊನಾ ವೈರಸ್ ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಈ ಹಿನ್ನೆಲೆ, ಸೋಂಕು ನಿಯಂತ್ರಿಸುವ ಸಲುವಾಗಿ ಹೊರ ರಾಜ್ಯಗಳಿಂದ ಬರುವವರಿಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ದೇಶದ ಕೆಲವು ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನೇ ಮೆರೆಯುತ್ತಿದ್ದು, ಹೀಗಾಗಿ ಕೊರೊನಾ ಸೋಂಕು ಹೆಚ್ಚಿರುವ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಗುಜರಾತ್, ರಾಜಸ್ಥಾನ ಹಾಗೂ ಮಧ್ಯಪ್ರದೇಶದಿಂದ ರಾಜ್ಯಕ್ಕೆ ಆಗಮಿಸುವವರು ಕಡ್ಡಾಯವಾಗಿ ಒಂದು ವಾರ ಕ್ವಾರಂಟೈನ್ನಲ್ಲಿ ಇರಬೇಕು. ಆರೋಗ್ಯ ಇಲಾಖೆ ಸೂಚಿಸಿರುವ ಹೋಟೆಲ್ ಅಥವಾ ಸಮುದಾಯ ಭವನಗಳಲ್ಲೇ ಕ್ವಾರಂಟೈನ್ ಆಗಬೇಕು. ಬಳಿಕ 5-7 ದಿನದಲ್ಲಿ ಗಂಟಲಿನ ದ್ರವವನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಾಗುವುದು. ಹಾಗೂ ಉಳಿದ ರಾಜ್ಯಗಳಿಂದ ಬರುವವರಿಗೆ ಹೋಂ ಕ್ವಾರಂಟೈನ್ ಮಾತ್ರ ಎಂದು ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ.










