ನವದೆಹಲಿ : ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಸುಪ್ರೀಂಕೋರ್ಟ್ ವಜಾಗೊಳಿಸಿದೆ. ಅಕ್ರಮ ಹಣಕಾಸು ವರ್ಗಾವಣೆ ಪ್ರಕರಣದಲ್ಲಿ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್ ಅ.23ರಂದು ಷರತ್ತುಬದ್ಧ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಇಡಿ ಪರ ವಕೀಲರು ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೇ ಇಡಿ ಅಧಿಕಾರಿಗಳು ನೀಡಿದ ಅರ್ಜಿಯನ್ನು ವಜಾಗೊಳಿಸುವಂತೆ ಡಿ.ಕೆ. ಶಿವಕುಮಾರ್ ಅವರು ಕೂಡಾ ಸುಪ್ರೀಂ ಕೋರ್ಟ್ಗೆ ಅರ್ಜಿಯನ್ನು ಸಲ್ಲಿಸಿದ್ದರು. ಈ ಕುರಿತು ವಿಚಾರಣೆ ನಡೆಸಿದ ನ್ಯಾ. ರೋಹಿಂಗ್ಟನ್ ನೇತೃತ್ವದ ಪೀಠ ಇಡಿ ಅಧಿಕಾರಿಗಳ ಮೇಲ್ಮನವಿ ಅರ್ಜಿಯನ್ನು ವಜಾಗೊಳಿಸಿದೆ.










