ಮೆಟ್ರೋ ಪ್ರಯಾಣ ದರ ಏರಿಕೆ: ಸಿಎಂ ವಿರುದ್ಧ ತೇಜಸ್ವಿ ಸೂರ್ಯ ವಾಗ್ದಾಳಿ.

27

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆ ವಿಚಾರ ದೇಶಾದ್ಯಂತ ಚರ್ಚೆಯಾಗುತ್ತಿದೆ. ಬೆಲೆ ಹೆಚ್ಚಳದಿಂದ ರೋಸಿ ಹೋಗಿರುವ ಮೆಟ್ರೋ ಪ್ರಯಾಣಿಕರು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಹೊರ ಹಾಕತ್ತಿದ್ದಾರೆ. ಈ ನಡುವೆ ಸಿಎಂ ಸಿದ್ದರಾಮಯ್ಯ ನಮ್ಮ ಮೆಟ್ರೋ ಬೆಲೆ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟನೆ ನೀಡಿ ಪತ್ರಿಕಾ ಪ್ರಕಟಣೆ ಹೊರಡಿಸಿದ್ದರು. ಸಿಎಂ ಸಿದ್ದರಾಮಯ್ಯರ ಈ ಹೇಳಿಕೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿರುಗೇಟು ನೀಡಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಸಿಎಂ ಸಿದ್ದರಾಮಯ್ಯ ಪೋಸ್ಟ್ ಗೆ ಪ್ರತಿಕ್ರಿಯೆ ನೀಡಿರುವ ತೇಜಸ್ವಿ ಸೂರ್ಯ ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಆರೋಪಿಸಿದ್ದಾರೆ. 2023 ರಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ಪ್ರತಿಯೊಂದು ಇಲಾಖೆಗಳಲ್ಲಿಯೂ ಬೆಲೆ ಹೆಚ್ಚಳ ಸಾಮಾನ್ಯವಾಗಿದೆ. ಬಿಎಂಟಿಸಿ ಪ್ರಯಾಣ ದರ, ಅಬಕಾರಿ ಸುಂಕ, ವಿದ್ಯುತ್ ಬಿಲ್, ಆಸ್ತಿ ತೆರಿಗೆ ಹೀಗೆ ಪ್ರತಿಯೊಂದರ ಬೆಲೆ ಹೆಚ್ಚಳವಾಗಿದೆ ಎಂದು ಹೇಳಿದರು. ಪ್ರಸ್ತುತ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಕುರಿತು ದರ ನಿಗದಿ ಸಮಿತಿ ರಚಿಸಲು ಮತ್ತು ಇದರ ಸಂಪೂರ್ಣ ಪ್ರಕ್ರಿಯೆಯನ್ನು ಪ್ರಾರಂಭಿಸಲು ಬಿಎಮ್‍ಆರ್‍ಸಿಎಲ್ ಗೆ ರಾಜ್ಯ ಸರ್ಕಾರ ಸಲಹೆ ನೀಡಿದ್ದು, ಸಮಿತಿಯಲ್ಲಿನ ರಾಜ್ಯ ಪ್ರತಿನಿಧಿಗಳ ಪ್ರಯಾಣದ ದರ ಏರಿಕೆಯ ಒತ್ತಾಯದ ಮೇರೆಗೆ ಪರಿಷ್ಕೃತ ದರದ ವರದಿಯನ್ನು ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು. ಪ್ರಯಾಣದ ಬೆಲೆ ಹೆಚ್ಚಳದಿಂದ ಬೆಂಗಳೂರಿನ ಜನತೆಗೆ ಉಂಟಾಗುವ ತೊಂದರೆಗಳ ಅರಿತು ಬಿಜೆಪಿ ಬೆಲೆ ಹೆಚ್ಚಳವನ್ನು ಮೊದಲಿನಿಂದಲೂ ವಿರೋಧಿಸುತ್ತಲೇ ಬಂದಿದೆ. ಸಿಎಂ ಸಿದ್ದರಾಮಯ್ಯ ಅವರೇ ಈ ಸಮಸ್ಯೆ ಬಗ್ಗೆ ನಿಮಗೆ ನಿಜವಾದ ಕಾಳಜಿ ಇದ್ದರೆ ಪರಿಷ್ಕೃತ ದರಗಳ ಹೆಚ್ಚಳವನ್ನು ಮರು ಪರಿಶೀಲಿಸಿ ನ್ಯಾಯಸಮ್ಮತ ದರ ನಿಗದಿಪಡಿಸಬೇಕು. ಬೆಲೆ ಕಡಿಮೆ ಮಾಡಲು ನಿಮ್ಮನ್ನು ಯಾವ ಕಾನೂನು ಅಡ್ಡಿಪಡಿಸುವುದಲ್ಲ ಎಂದು ಹೇಳಿದರು.