ಬೆಂಗಳೂರು : ರಮೇಶ್ ಜಾರಕಿಹೊಳಿ ಅವರ ವಿರುದ್ಧ ರೇಪ್ ಕೇಸ್ ಹಾಕಬೇಕು. ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಆಗ್ರಹಿಸಿದ್ದಾರೆ.
ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ರಮೇಶ್ ಜಾರಕಿಹೊಳಿ ಬಳಿ ಕೆಲಸಕ್ಕೆಂದು ಹೋಗಿದ್ದೆ, ಆಗ ಅವರು ನನ್ನನ್ನು ಬಳಸಿಕೊಂಡಿದ್ದಾರೆಂದು ಆ ಯುವತಿ ಹೇಳಿದ್ದಾರೆ. ಹೀಗಾಗಿ ಅದು ರೇಪ್ ಆಗುತ್ತದೆ. ಜಾರಕಿಹೊಳಿ ವಿರುದ್ದ ರೇಪ್ ಕೇಸ್ ಹಾಕಬೇಕು. ಆ ಯುವತಿಗೆ ಕೂಡಲೇ ರಕ್ಷಣೆ ಕೊಡಬೇಕು. ಎಲ್ಲಿ ಸ್ತ್ರೀಯರನ್ನು ಪೂಜಿಸುತ್ತಾರೋ ಅಲ್ಲಿ ದೇವತೆಗಳು ಸಂತೃಪ್ತರಾಗಿರುತ್ತಾರೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ.
ನನಗೆ ಎಸ್ಐಟಿ ಮೇಲೆ ನಂಬಿಕೆ ಇಲ್ಲ. ಈ ಪ್ರಕರಣವನ್ನು ಮುಚ್ಚಿಹಾಕಲು ನೋಡುತ್ತಿದ್ದಾರೆ. ಹಾಗಾಗಿ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರನ್ನು ನೇಮಿಸಬೇಕು. ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡಬೇಕಾಗಿರುವುದು ಪ್ರಜಾಪ್ರಭುತ್ವದಲ್ಲಿ ನಮ್ಮ ಕರ್ತವ್ಯ. ಹೈಕೋರ್ಟ್ ಸಿಜೆ ನೇತೃತ್ವದಲ್ಲಿ ತನಿಖೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.
ಜಾರಕಿಹೊಳಿ ರಾಸಲೀಲೆ ಸಿಡಿ ಹೊರಬರುತ್ತಿದ್ದಂತೆಯೇ ಆರು ಮಂದಿ ಸಚಿವರು ತಮ್ಮ ವಿರುದ್ಧ ಮಾಧ್ಯಮಗಳು ವರದಿ ಪ್ರಸಾರ ಮಾಡಬಾರದೆಂದು ಕೋರ್ಟ್ ಮೊರೆ ಹೋಗಿದ್ದರು. ಆ ಆರು ಸಚಿವರು ರಾಜೀನಾಮೆ ಕೊಡಬೇಕು. ಹಾಗೆಯೇ ಸಂತ್ರಸ್ತೆ ಹೇಳಿಕೆ ಆಧರಿಸಿ ರಮೇಶ್ ಜಾರಕಿಹೊಳಿ ವಿರುದ್ಧ ಎಫ್ಐಆರ್ ದಾಖಲಿಸಬೇಕು. ಸದನದಲ್ಲಿ ನಮ್ಮ ಹೋರಾಟ ಮುಂದುವರಿಸುತ್ತೇವೆ. ಎಂದು ಸಿದ್ದರಾಮಯ್ಯನವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.










