ಚೆನ್ನೈ: ತಮಿಳು ಸೂಪರ್ ಸ್ಟಾರ್ ಹಾಗೂ ರಾಜಕಾರಣಿ ಕಮಲ್ ಹಾಸನ್ ಅವರನ್ನು ಡಿಎಂಕೆ ಪಕ್ಷವು ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಸಾಧ್ಯತೆ ಇದೆ. ತಮಿಳುನಾಡು ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಸಚಿವ ಪಿ.ಕೆ ಶೇಖರ್ ಬಾಬು ಅವರು ಇಂದು ಕಮಲ್ ಹಾಸನ್ರನ್ನು ಅವರ ನಿವಾಸದಲ್ಲಿ ಭೇಟಿಯಾದ ನಂತರ ಈ ಚರ್ಚೆಗೆ ಮತ್ತೆ ಬಲ ಬಂದಂತಾಗಿದೆ. ಮಕ್ಕಳ್ ನೀಧಿ ಮೈಯಂ ಎಂಬ ರಾಜಕೀಯ ಪಕ್ಷವನ್ನು ಸ್ಥಾಪಿಸಿದ ಕಮಲ್ ಹಾಸನ್, 2024 ರ ಲೋಕಸಭಾ ಚುನಾವಣೆಯ ಸಮಯದಲ್ಲಿ ಐಎನ್ಡಿಐಎ ಮೈತ್ರಿಕೂಟದೊಂದಿಗೆ ಮೈತ್ರಿ ಮಾಡಿಕೊಂಡಿದ್ದರು ಮತ್ತು ತಮಿಳುನಾಡಿನಲ್ಲಿ ಡಿಎಂಕೆ ನೇತೃತ್ವದ ರಂಗದ ಪರವಾಗಿ ವ್ಯಾಪಕವಾಗಿ ಪ್ರಚಾರ ಮಾಡಿದ್ದರು. ಈ ಚುನಾವಣೆಯಲ್ಲಿ ರಾಜ್ಯದ ಎಲ್ಲಾ 39 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಮೂಲಕ ಮೈತ್ರಿಕೂಟವು ಕ್ಲೀನ್ ಸ್ವೀಪ್ ಮಾಡಿಕೊಂಡಿತ್ತು. ಸಾರ್ವತ್ರಿಕ ಚುನಾವಣೆ ಸಮಯದಲ್ಲಿ ಡಿಎಂಕೆ ಪರವಾಗಿ ಕಮಲ್ ಹಾಸನ್ ಪ್ರಚಾರ ಮಾಡಿದ್ದಕ್ಕೆ ಪ್ರತಿಯಾಗಿ ಅವರಿಗೆ ರಾಜ್ಯಸಭಾ ಸದಸ್ಯತ್ವ ನೀಡುವುದಾಗಿ ಮುಖ್ಯಮಂತ್ರಿ ಮತ್ತು ಪಕ್ಷದ ಮುಖ್ಯಸ್ಥ ಎಂ.ಕೆ ಸ್ಟಾಲಿನ್ ಭರವಸೆ ನೀಡಿದ್ದಾರೆ ಎಂದು ಡಿಎಂಕೆ ಮೂಲಗಳು ಹೇಳಿವೆ. ಜೂನ್ 2025 ರಲ್ಲಿ ಆರು ರಾಜ್ಯಸಭಾ ಸ್ಥಾನಗಳು ಖಾಲಿಯಾಗಲಿದ್ದು, ಶೇಖರ್ ಬಾಬು ಅವರು ಕಮಲ್ ಹಾಸನ್ ಅವರನ್ನು ಭೇಟಿಯಾಗಿ, ರಾಜ್ಯಸಭೆಗೆ ನಾಮನಿರ್ದೇಶನ ಮಾಡುವ ಮುಖ್ಯಮಂತ್ರಿ ಸ್ಟಾಲಿನ್ ಅವರು ಭರವಸೆ ನೀಡಿದರು ಎಂದು ವರದಿಯಾಗಿದೆ.










