ಹುಬ್ಬಳ್ಳಿ: ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂಬುದು ರಾಷ್ಟ್ರಕವಿ ಕುವೆಂಪು ಅವರ ಘೋಷವಾಕ್ಯ. ಇದನ್ನು ತಿದ್ದುಪಡಿ ಮಾಡುವ ಮೂಲಕ ಕುವೆಂಪು ಅವರಿಗೂ ಈ ಸರ್ಕಾರ ಅವಮಾನ ಮಾಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದ್ದಾರೆ.
ನಗರದಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಶಾಲೆ, ಹಾಸ್ಟೆಲ್ ಗಳಲ್ಲಿ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಘೋಷ ವಾಕ್ಯವನ್ನು ಜ್ಞಾನ ದೇಗುಲವಿದು ಧೈರ್ಯವಾಗಿ ಪ್ರಶ್ನಿಸಿ ಎಂದು ಬರೆಸುವ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಮುಟ್ಟಾಳತನವನ್ನು ತೋರ್ಪಡಿಸಿದೆ. ಇದು ಕಾಂಗ್ರೆಸ್ ನ ತುಷ್ಟೀಕರಣದ ಪರಮಾವಧಿ ಎಂದು ಕಿಡಿ ಕಾರಿದರು.
ಈ ಸರ್ಕಾರ, ಕುವೆಂಪು ಅವರ ಘೋಷ ವಾಕ್ಯವನ್ನೇ ಬದಲಾಯಿಸಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ದೃಷ್ಟಿಯಲ್ಲಿ ಕುವೆಂಪು ಜಾತ್ಯಾತೀತರಲ್ಲವೇ ಎಂದು ಪ್ರಶ್ನಿಸಿದರು. ಹಿಂದೂ ವಿರೋಧಿ ನಡೆ ಜ್ಞಾನ ದೇಗುಲವಿದು ಕೈ ಮುಗಿದು ಒಳಗೆ ಬನ್ನಿ ಎಂದಿರುವುದರಲ್ಲಿ ತಪ್ಪೇನಿದೆ? ಎಂದು ಪ್ರಶ್ನಿಸಿರುವ ಜೋಶಿ ಅವರು, ಇದು ಕಾಂಗ್ರೆಸ್ ಸರ್ಕಾರದ ಹಿಂದೂ ವಿರೋಧಿ ನಡೆಯನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ತುಷ್ಟೀಕರಣದ ಪರಾಕಾಷ್ಠೆ ತಲುಪಿದೆ. ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರ ಎಷ್ಟರ ಮಟ್ಟಿಗೆ ಹಿಂದೂ ವಿರೋಧಿ ನಡೆ ಅನುಸರಿಸುತ್ತಿದೆ ಮತ್ತು ಯಾವ ಹಂತಕ್ಕೆ ತುಷ್ಟೀಕರಣ ಮಾಡುತ್ತಿದ್ದಾರೆ ಎಂಬುದು ಇದರಿಂದ ಸ್ಪಷ್ಟವಾಗುತ್ತದೆ ಎಂದು ಸಚಿವ ಜೋಶಿ ಕಿಡಿಕಾರಿದರು.










