ಕನ್ನಡ ಕಿರುತೆರೆಯ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ ಸೀಸನ್ 9ರಲ್ಲಿ ತುಳುನಾಡಿನ ರಾಕ್ ಸ್ಟಾರ್ ರೂಪೇಶ್ ಶೆಟ್ಟಿ ಮಿಂಚುತ್ತಿದ್ದಾರೆ. ಇದೀಗ ನಾನು ಗಡಿನಾಡ ಕನ್ನಡಿಗ ಎಂದು ಹೇಳಿರುವ ರೂಪೇಶ್ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ವಿರೋಧಿಸುವ ಭರದಲ್ಲಿ ಕೆಲವರು ಬೆದರಿಕೆ ಹಾಕಿದ್ದಾರೆ ಮತ್ತು ಅವಾಚ್ಯ ಪದಗಳಿಂದ ನಿಂದನೆ ಮಾಡಿದ್ದಾರೆ. ಈ ಸಂಬಂಧ ಮಂಗಳೂರಿನಲ್ಲಿ ರೂಪೇಶ್ ಶೆಟ್ಟಿ ಕುಟುಂಬದವರು ದೂರು ದಾಖಲಿಸಿದ್ದಾರೆ.
ಸಾನ್ಯಾ ಐಯ್ಯರ್ ಎಲಿಮಿನೇಟ್ ಆದ ಬಳಿಕ ರೂಪೇಶ್ ಶೆಟ್ಟಿ ಅವರು ಸಖತ್ ಎಮೋಷನಲ್ ಆಗಿದ್ದಾರೆ. ಇದೀಗ ಬಿಗ್ ಬಾಸ್ ಒಳಗಿನ ವಿಚಾರಗಳು ದೊಡ್ಮನೆ ಆಚೆಗೂ ವಿರೋಧ ಹುಟ್ಟು ಹಾಕಿದೆ. ಕನ್ನಡ ರಾಜ್ಯೋತ್ಸವದ ದಿನ ಮಾತನಾಡುತ್ತಾ ರೂಪೇಶ್, ನಾನು ಗಡಿನಾಡ ಕನ್ನಡಿಗ ಅಂತ ಹೇಳಿ, ತಾನು ಹುಟ್ಟಿ ಬೆಳೆದ ಊರಿನ ಬಗ್ಗೆ ಮಾತನಾಡಿದ್ದರು. ಆದರೆ ತುಳುನಾಡಿನಲ್ಲಿ ಹೆಸರು ಗಳಿಸಿ ಇದೀಗ ಗಡಿನಾಡ ಕನ್ನಡಿಗ ಅಂತ ಹೇಳಿರುವುದು ಅಸಮಾಧಾನಕ್ಕೆ ಕಾರಣವಾಗಿತ್ತು.
ಈ ಬಗ್ಗೆ ಸಾಮಾಜಿಕ ತಾಣಗಳಲ್ಲಿ ಪರ ವಿರೋಧದ ಅಭಿಪ್ರಾಯ ವ್ಯಕ್ತವಾಗಿತ್ತು. ಹಲವು ತುಳುವರು ರೂಪೇಶ್ ಬೆಂಬಲಕ್ಕೆ ನಿಂತರೇ ಮತ್ತೆ ಕೆಲವರು ರೂಪೇಶ್ ವಿರುದ್ದ ಅಸಮಾಧಾನ ಹೊರಹಾಕಿದ್ದರು. ಈ ಬಗ್ಗೆ ರೂಪೇಶ್ ಪೋಷಕರಿಗೂ ಕೆಲವರು ಬೆದರಿಕೆ ಒಡ್ಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕುಟುಂಬಸ್ಥರು ಮಂಗಳೂರು ಪೊಲೀಸ್ ಕಮಿಷನರ್ ಶಶಿಕುಮಾರ್ ಗೆ ದೂರು ನೀಡಿದ್ದಾರೆ.










