ವಕ್ಫ್ ವಿವಾದ: ಕಾಂಗ್ರೇಸ್ ಸರ್ಕಾರದ ವಿರುದ್ಧ ಬಿಜೆಪಿ ಇಂದು ರಾಜ್ಯದಾದ್ಯಂತ ಪ್ರತಿಭಟನೆ.

23

ಬೆಂಗಳೂರು: ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಬೇಕು, ಅಧಿಕಾರ ದುರ್ಬಳಕೆ ಕುರಿತು ಸಿಬಿಐ ತನಿಖೆ ನಡೆಸಬೇಕು ಮತ್ತು ವಿವಾದಕ್ಕೆ ಕಾರಣವಾದ ಸಚಿವ ಜಮೀರ್ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಎಲ್ಲಾ ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲೂಕುಗಳ ತಾಲೂಕು ಕಚೇರಿ ಎದುರು ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯಲ್ಲಿ ಪಕ್ಷದ ಎಲ್ಲಾ ಮುಖಂಡರು ಹಾಗೂ ಕಾರ್ಯಾಕರ್ತರು ಪಾಲ್ಗೊಳ್ಳಲಿದ್ದಾರೆಂದು ಬಿಜೆಪಿ ಪಕ್ಷದ ನಾಯಕರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನ ದಲ್ಲಿ ಭಾನುವಾರ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ಸೋಮವಾರ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದರು. ಕರ್ನಾಟಕದ ವಕ್ಫ್‍ನಲ್ಲಿ ನಡೆದಿರುವ ನಕಲಿ ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಇ.ಡಿ. ತನಿಖೆಯಾಗಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪವೊಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೇ, ಈಗ ಅಲ್ಪಸಂಖ್ಯಾತರ ಮತ ಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ, ಕರ್ನಾಟಕ ವಕ್ಫ್ ಬೋರ್ಡ್ ಮೂಲಕ ಮಾಡಿರುವ ಬೃಹತ್ ದಾಖಲೆಗಳ ಸೃಷ್ಟಿಯ ಎಲ್ಲಾ ವ್ಯವಹಾರಗಳನ್ನು ಸಿಬಿಐ ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದರು. ರಾಜ್ಯದಲ್ಲಿ ವಕ್ಫ್ ಕಾಯ್ದೆಯ ದುರ್ಬಳಕೆಯ ಕಾರಣಕ್ಕಾಗಿ ರೈತರು, ಮಠಗಳು, ಹಿಂದೂ ದೇವಾಲಯಗಳಿಗೆ ಆತಂಕ ಎದುರಾಗಿದೆ. ಹಿಂದೆ ಕಾಂಗ್ರೆಸ್‍ನವರು ರೂಪಿಸಿರುವ ವಕ್ಫ್ ಕಾಯ್ದೆ ಮುಸ್ಲಿಂ ತುಷ್ಟೀಕರಣಕ್ಕಾಗಿ, ಮತಗಳಿಕೆಯ ಆಸೆಯೊಂದಿಗೆ ರಚಿಸಿರುವ ಕಾಯ್ದೆಯಾಗಿದೆ ಎಂದು ತಿಳಿಸಿದರು. ರೈತರು ವಿಭಿನ್ನ ತರಹದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅಷ್ಟೇ ಅಲ್ಲದೆ ಆಸ್ತಿ ಕಳೆದುಕೊಳ್ಳುವ ಭೀತಿ ನಿರ್ಮಾಣವಾಗಿದೆ. ಈ ಸಂಬಂಧ ಕೇವಲ ನೋಟಿಸ್ ಹಿಂಪಡೆದರೆ ಸಾಲದು, ರೈತರ ಆಸ್ತಿಗಳಲ್ಲಿ ರೈತರ ಹೆಸರನ್ನು ನಮೂದಿಸಬೇಕು. ಅಲ್ಲದೆ, 1974ರ ವಕ್ಫ್ ಆಸ್ತಿ ಕುರಿತ ಗೆಜೆಟ್ ಅಧಿಸೂಚನೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.