ಚಂಡೀಗಢ : 34 ವರ್ಷಗಳ ಹಿಂದಿನ ಪ್ರಕರಣಕ್ಕೆ ಸಂಬಂಧಿಸಿಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ಅವರನ್ನು ವೈದ್ಯಕೀಯ ತಪಾಸಣೆಗಾಗಿ ಇಂದು ಪಟಿಯಾಲಾದ ಸರ್ಕಾರಿ ರಾಜೀಂದ್ರ ಆಸ್ಪತ್ರೆಗೆ ಪೊಲೀಸರು ಕರೆತಂದಿದ್ದಾರೆ.
ಏನಿದು ಪ್ರಕರಣ?
1988ರಲ್ಲಿ ವೃದ್ಧರೊಬ್ಬರ ಮೇಲೆ ರಸ್ತೆಯಲ್ಲಿ ದಾಂಧಲೆ ನಡೆಸಿ ಹಲ್ಲೆ ಮಾಡಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಗುರ್ನಮ್ ಮೃತಪಟ್ಟಿದ್ದರು. ಸ್ಥಳೀಯ ಕೋರ್ಟ್, ಹೈಕೋರ್ಟ್ ಬಳಿಕ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.
ಸುಪ್ರೀಂ ನ್ಯಾಯಮೂರ್ತಿಗಳಾದ ಜೆ.ಚೆಲಮೇಶ್ವರ ಮತ್ತು ಸಂಜಯ್ ಕಿಶನ್ ಕೌಲ್ ಅವರನ್ನೊಳಗೊಂಡ ನ್ಯಾಯಪೀಠ 2018ರಲ್ಲಿ ಭಾರತೀಯ ದಂಡ ಸಂಹಿತೆ ಸೆಕ್ಷನ್ 323ರಡಿಯಲ್ಲಿ ಅಪರಾಧಿ ಎಂದು ತೀರ್ಪು ನೀಡಿ 1000 ರೂಪಾಯಿ ದಂಡ ವಿಧಿಸಿತ್ತು. ಆದರೆ ಜೈಲು ಶಿಕ್ಷೆಯಿಂದ ಸಿಧುಗೆ ವಿನಾಯಿತಿ ನೀಡಲಾಗಿತ್ತು.
ಜೈಲು ಶಿಕ್ಷೆಯಿಂದ ವಿನಾಯಿತಿ ನೀಡಿದ್ದನ್ನು ಪ್ರಶ್ನಿಸಿ ಸಂತ್ರಸ್ತನ ಕುಟುಂಬದ ಸದಸ್ಯರು ಮರು ಪರಿಶೀಲನಾ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಸಿಧು ಅವರಿಗೆ ಒಂದು ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿದೆ.










