ದಾವಣಗೆರೆ: ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ಇಬ್ಬರು ರೈತರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಅಣಬೂರು ಗೊಲ್ಲರಹಟ್ಟಿ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ.
ಅಣಬೂರು ಗೊಲ್ಲರಹಟಿ ಗ್ರಾಮದ ಕಾಟಲಿಂಗಪ್ಪ(35 ವರ್ಷ), ರಾಜಪ್ಪ(43) ಮೃತ ರೈತರು. ಹೊಲದಲ್ಲಿ ಬಿತ್ತನೆಗೆ ತೆರಳಿದ್ದ ಇವರು, ಮಳೆಯಿಂದ ಆಶ್ರಯ ಪಡೆಯಲು ಮರದ ಕೆಳಗೆ ನಿಂತಿದ್ದ ವೇಳೆ ಸಿಡಿಲು ಬಡಿದು ಈ ದುರಂತ ನಡೆದಿದೆ.
ಜಗಳೂರು ಶಾಸಕ ಬಿ. ದೇವೆಂದ್ರಪ್ಪ, ತಹಶೀಲ್ದಾರ್ ಸಂತೋಷ್ ಕುಮಾರ್ ಘಟನಾ ಸ್ಥಳಕ್ಕೆ ಆಗಮಿಸಿ ಮೃತರ ಕುಟುಂಬಕ್ಕೆ ಪ್ರಕೃತಿ ವಿಕೋಪ ಪರಿಹಾರ ನಿಧಿಯಡಿ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡಿದರು. ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.