ಬೆಂಗಳೂರು : ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ರಿವಾಲ್ವರ್ ಸದ್ದು ಮಾಡಿದ್ದು, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳ ಕಾಲಿಗೆ ಸಿಸಿಬಿ ಪೊಲೀಸರು ಗುಂಡೇಟು ನೀಡಿದ್ದು, ಬಳಿಕ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಸತೀಶ್ ಅಲಿಯಾಸ್ ಸೆಡ್ಕಾ ಹಾಗೂ ಮಹೇಶ್ ಅಲಿಯಾಸ್ ಹಂದಿ ಎಂಬುವವರ ಮೇಲೆ ಪೊಲೀಸರು ಗುಂಡು ಹಾರಿಸಿದ್ದು, ಈ ಆರೋಪಿಗಳು 2016ರಲ್ಲಿ ಸಿದ್ಲಗಟ್ಟ ಪಾಲಿಕೆ ಸದಸ್ಯನ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದರು ಎನ್ನಲಾಗಿದ್ದು, ಇವರು ನಗರದ ಬಿಟಿಎಂ ಲೇಔಟ್ ಬಳಿಯ ರಂಕಾ ಕಾಲೋನಿಯಲ್ಲಿ ತಲೆಮರೆಸಿಕೊಂಡಿದ್ದಾರೆ ಎಂಬ ಖಚಿತ ಮಾಹಿತಿಯನ್ನು ತಿಳಿದ ಸಿಸಿಬಿ ಇನ್ಸ್ಪೆಕ್ಟರ್ ಗಳಾದ ಪುನೀತ್ ಕುಮಾರ್ ಮತ್ತು ಕೇಶವ್ ಮೂರ್ತಿ ಅವರು ಆರೋಪಿಗಳನ್ನು ವಶಕ್ಕೆ ಪಡೆಯಲು ತೆರಳಿದ್ದಾರೆ. ಈ ವೇಳೆ ಆರೋಪಿಗಳು ಪೇದೆ ಹನುಮೇಶ್ ಎಂಬುವವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲು ಮುಂದಾಗಿದ್ದು, ತಕ್ಷಣ ಎಚ್ಚೆತ್ತ ಪೊಲೀಸರು ಆರೋಪಿಗಳನ್ನು ಶರಣಾಗುವಂತೆ ಸೂಚಿಸಿದ್ದಾರೆ. ಆದರೂ ಅವರು ಪೊಲೀಸರ ಮೇಲೆ ಹಲ್ಲೆ ಮುಂದಾದಾಗ ಪೊಲೀಸರು ಆತ್ಮರಕ್ಷಣೆಗಾಗಿ ಆರೋಪಿಗಳ ಕಾಲಿಗೆ ಗುಂಡು ಹಾರಿಸಿದ್ದು, ಬಳಿಕ ಅವರನ್ನು ಸ್ಥಳೀಯ ಆಸ್ಪತ್ತೆಗೆ ದಾಖಲಿಸಿದ್ದಾರೆ. ಈ ಕುರಿತು ಮೈಕೋ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.










