ಚೆನ್ನೈ : ಭಾರತದ ಮೊದಲ ಗವರ್ನರ್ ಜನರಲ್ ಮತ್ತು ತಮಿಳುನಾಡಿನ ಮಾಜಿ ಕಾಂಗ್ರೆಸ್ ನಾಯಕ ಸಿ ರಾಜಗೋಪಾಲಾಚಾರಿ ಅವರ ಮರಿ ಮೊಮ್ಮಗ ಸಿಆರ್ ಕೇಶವನ್ ಅವರು ಇಂದು ಬಿಜೆಪಿಗೆ ಸೇರ್ಪಡೆಗೊಂಡರು.
ದೆಹಲಿಯಲ್ಲಿ ಬಿಜೆಪಿ ಮುಖ್ಯ ಕಚೇರಿಯಲ್ಲಿ ಕೇಂದ್ರ ಸಚಿವ ಜನರಲ್ ವಿಕೆ ಸಿಂಗ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಫೆಬ್ರವರಿ 23 ರಂದು ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವಕ್ಕೆ ಕೇಶವನ್ ರಾಜೀನಾಮೆ ನೀಡಿದ್ದರು.
ಪಕ್ಷಕ್ಕೆ ಸೇರ್ಪಡೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೇಶವನ್, ಪ್ರಧಾನಿ ತಮಿಳುನಾಡಿಗೆ ಭೇಟಿ ನೀಡುವ ದಿನದಂದು ನನ್ನನ್ನು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷಕ್ಕೆ ಸೇರಿಸಿಕೊಂಡಿರುವುದಕ್ಕಾಗಿ ಬಿಜೆಪಿಗೆ ಧನ್ಯವಾದ ಹೇಳಲು ಬಯಸುತ್ತೇನೆ ಎಂದು ತಿಳಿಸಿದರು.
ಗುರುವಾರ ಕೇರಳ ಕಾಂಗ್ರೆಸ್ ನ ಪ್ರಮುಖ ನಾಯಕ ಹಾಗೂ ಮಾಜಿ ರಕ್ಷಣಾ ಸಚಿವ ಎಕೆ ಆಂಟನಿ ಅವರ ಪುತ್ರ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದರೆ, ನಿನ್ನೆ ಅಖಂಡ ಆಂಧ್ರಪ್ರದೇಶದ ಕೊನೆಯ ಸಿಎಂ ಹಾಗೂ ಮಾಜಿ ಕಾಂಗ್ರೆಸ್ ನಾಯಕ ಕಿರಣ್ ಕುಮಾರ್ ರೆಡ್ಡಿ ಬಿಜೆಪಿ ಸೇರ್ಪಡೆಯಾಗಿದ್ದರು. ಈಗ ತಮಿಳುನಾಡಿನಲ್ಲಿ ಮಾಜಿ ಕಾಂಗ್ರೆಸ್ ನಾಯಕ ಸಿಆರ್ ಕೇಶವನ್ ಬಿಜೆಪಿಗೆ ಸೇರಿದ್ದಾರೆ.










