ಬೆಂಗಳೂರು : ಹಣಕ್ಕಾಗಿ ಕೋವಿಡ್ ನಿಂದ ಮೃತಪಟ್ಟ ಶವಗಳನ್ನು ಇರಿಸಿಕೊಂಡರೆ ಅಂತಹ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ಕೆಪಿಎಂಇ) ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆಸ್ಪತ್ರೆಯ ನೋಂದಣಿ ರದ್ದುಗೊಳಿಸುವಂತೆ ಸರ್ಕಾರ ಆದೇಶಿಸಿದೆ.
‘ಕೆಲವು ಆಸ್ಪತ್ರೆಗಳಲ್ಲಿ ಕೋವಿಡ್ ಸೋಂಕಿತರ ಮೃತದೇಹ ನೀಡಲು ಬಾಕಿ ಬಿಲ್ ಮೊತ್ತ ಪಾವತಿಸುವಂತೆ ಒತ್ತಡ ಹೇರುತ್ತಿರುವ ದೂರುಗಳು ಬಂದಿವೆ. ಕೆಪಿಎಂಇ ಕಾಯ್ದೆಯ ಪ್ರಕಾರ ಈ ರೀತಿ ಮಾಡುವವರ ವಿರುದ್ಧ ಕ್ರಮ ಜರುಗಿಸಲು ಅವಕಾಶವಿದೆ. ಜಿಲ್ಲಾಧಿಕಾರಿಗಳು ಇಂತಹ ದೂರುಗಳನ್ನು ಆಧರಿಸಿ ಪ್ರಕರಣ ದಾಖಲಿಸಬೇಕು. ಶವ ನೀಡಲು ಬಿಲ್ ಪಾವತಿಗೆ ಒತ್ತಾಯಿಸುವ ಆಸ್ಪತ್ರೆಗಳ ನೋಂದಣಿ ರದ್ದುಗೊಳಿಸಬೇಕು’ ಎಂದು ಆರೋಗ್ಯ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಆದೇಶದಲ್ಲಿ ತಿಳಿಸಿದ್ದಾರೆ.
ಈ ರೀತಿ ವರದಿಯಾದ ಎಲ್ಲ ಪ್ರಕರಣಗಳು ಹಾಗೂ ಕೈಗೊಂಡ ಕ್ರಮಗಳ ಕುರಿತು ವಾರಕ್ಕೊಮ್ಮೆ ವರದಿ ಸಲ್ಲಿಸುವಂತೆಯೂ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ.










