ಶಿವಮೊಗ್ಗ : ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು, ಪ್ರಾಥಮಿಕ ಶಾಲೆಯ 1ರಿಂದ 5ನೇ ತರಗತಿಗಳನ್ನು ಪುನಾರಂಭಿಸುವ ಬಗ್ಗೆ ಸದ್ಯದಲ್ಲೇ ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಪಡೆದು ತೀರ್ಮಾನಿಸಲಾಗುವುದು. 6, 7, 8ನೇ ತರಗತಿಗಳನ್ನು ನಮ್ಮ ಶಿಕ್ಷಕರು ನಡೆಸಿದಂತಹ ರೀತಿ ನೋಡಿ ತುಂಬ ಸಂತೋಷವಾಗಿದೆ ಎಂದರು.
ಮಕ್ಕಳಿಗೆ ಬ್ರಿಡ್ಜ್ ಕೋರ್ಸ್ ಮಾಡುತ್ತಿದ್ದೇವೆ. ಸಿಲೆಬಸ್ ಪೂರ್ತಿ ಮಾಡಿದರೆ ಮಕ್ಕಳಿಗೆ ಲಾಭ. ಒಂದೂವರೆ ವರ್ಷ ಮಕ್ಕಳು ಶಾಲೆಯಿಂದ ದೂರ ಉಳಿದಿದ್ದಾರೆ. ಅದನ್ನು ಬ್ರಿಡ್ಜ್ ಕೋರ್ಸ್ ನಲ್ಲಿ ಪೂರ್ಣಗೊಳಿಸಬೇಕಿದೆ. ಈ ವರ್ಷವು ಪಠ್ಯ ಕಡಿತಗೊಳಿಸಿದರೆ ಮುಂದಿನ ತರಗತಿಗಳಿಗೆ ತೊಂದರೆ ಆಗುತ್ತದೆ. ಹೀಗಾಗಿ ಆ ಬಗ್ಗೆ ಯಾವ ನಿರ್ಣಯ ಕೈಗೊಂಡಿಲ್ಲ. ಮುಂದಿನ ದಿನಗಳಲ್ಲಿ ಶಿಕ್ಷಕರ ಸಹಕಾರ ನೋಡಿ, ಅವಶ್ಯಕತೆ ಬಿದ್ದರೆ ನಿರ್ಣಯ ಕೈಗೊಳ್ಳುತ್ತೇವೆ. ಪಠ್ಯ ಕಡಿತಗೊಳಿಸುವ ಬಗ್ಗೆ ಪ್ರಯತ್ನ ಮಾಡುತ್ತೇವೆ ಎಂದು ತಿಳಿಸಿದರು.
ಕೇರಳದಲ್ಲಿ ಕೋವಿಡ್ ಸೋಂಕು ಹೆಚ್ಚುತ್ತಿದೆ. ಆದರೆ, ನಮ್ಮ ದಕ್ಷಿಣ ಕನ್ನಡ, ಉಡುಪಿಯಲ್ಲಿ ಕಡಿಮೆ ಆಗುತ್ತಿದೆ. ಕೊರೊನಾ ಹೆಚ್ಚಾದರೆ, ಶಾಲೆ ಬಂದ್ ಮಾಡುವ ಬಗ್ಗೆ ಸರ್ಕಾರ ತೀರ್ಮಾನ ಮಾಡುತ್ತದೆ ಎಂದು ಹೇಳಿದರು.










