ಮಡಿಕೇರಿ : ಪೊನ್ನಂಪೇಟೆ ತಾಲೂಕಿನ ಕುಟ್ಟ ಸಮೀಪದ ಪಲ್ಲೇರಿ ಗ್ರಾಮದಲ್ಲಿ ಕೇವಲ 24 ಗಂಟೆಗಳಲ್ಲಿ ಹುಲಿಯೊಂದು ಇಬ್ಬರನ್ನು ಬಲಿ ಪಡೆದಿದೆ.
ಮೃತರನ್ನು ಪಲ್ಲೇರಿಯ ರಾಜು(70) ಎಂದು ಗುರುತಿಸಲಾಗಿದೆ. ಇಂದು ಮುಂಜಾನೆ 7 ಗಂಟೆಗೆ ಈ ದಾಳಿ ನಡೆದಿದೆ ಎಂದು ತಿಳಿದುಬಂದಿದೆ. ಮೃತ ರಾಜು ತೋಟದ ಕೆಲಸಕ್ಕೆಂದು ಕುಟ್ಟಗ್ರಾಮಕ್ಕೆ ಬಂದಿದ್ದರು. ತೋಟದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹುಲಿ ದಾಳಿ ಮಾಡಿ ಎಳೆದೊಯ್ದಿದೆ.
ಸ್ಥಳಕ್ಕೆ ನಾಗರಹೊಳೆ ಎಸಿಎಫ್ ಗೋಪಾಲ್ ಮತ್ತು ಹುಲಿ ಕಾರ್ಯಾಚರಣೆ ಪಡೆಯ ಸಿಬ್ಬಂದಿ ತೆರಳಿದ್ದಾರೆ. ರಾಜು ಅವರನ್ನು ಕೊಂದ ಹುಲಿ ಕಾಫಿ ತೋಟದಲ್ಲಿ ಅಡಗಿರುವುದು ಗೋಚರಿಸಿದೆ. ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿಯಲು ಸಿದ್ಧತೆ ನಡೆಸಿದ್ದಾರೆ.
ನಿನ್ನೆ ಸಂಜೆ ಹುಲಿ ದಾಳಿಗೆ 12 ವರ್ಷದ ಬಾಲಕ ಚೇತನ್ ಸಾವನ್ನಪ್ಪಿದ್ದನು. ಮನುಷ್ಯರ ಮೇಲೆ ನಿರಂತರವಾಗಿ ದಾಳಿ ನಡೆಸುತ್ತಿರುವ ಹುಲಿ ಕಾಫಿ ತೋಟದಲ್ಲಿಯೇ ಸುಳಿದಾಡುತ್ತಿದ್ದು ಕಾರ್ಮಿಕರ ಆತಂಕ ಹೆಚ್ಚಿಸಿದೆ.










