ಉಡುಪಿ : ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರ 89ನೇ ಹುಟ್ಟುಹಬ್ಬದ ಅಂಗವಾಗಿ ಶ್ರೀಗಳನ್ನು ಭೇಟಿಯಾದ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಹಾಗೂ ಅವರ ಪತ್ನಿ ಚೆನ್ನಮ್ಮ ಅವರು ಶ್ರೀಗಳ ಆಶೀರ್ವಾದವನ್ನು ಪಡೆದಿದ್ದಾರೆ. ದಂಪತಿಯನ್ನು ಆಶೀರ್ವದಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀಗಳು ದೇವೇಗೌಡ ಅವರು ಪ್ರಧಾನಿಯಾಗಿದ್ದಾಗ ಉತ್ತಮ ಕೆಲಸ ಹಾಗೂ ಸಮಸ್ಯೆಯನ್ನು ಬಗೆಹರಿಸಿದ್ದು, ಅವರೊಬ್ಬ ಉತ್ತಮ ಅಧಿಕಾರಿ ಹಾಗೂ ರೈತರ ಪರ ಹೋರಾಟಗಾರ ಎಂದರು. ಹೆಚ್.ಡಿ. ದೇವೇಗೌಡ ಅವರು ಇನ್ನಷ್ಟು ದಿನ ಪ್ರಧಾನಿಯಾಗಿದ್ದರೆ ಕಾಶ್ಮೀರದ ಸಮಸ್ಯೆ ಪರಿಹಾರವಾಗುತ್ತಿತ್ತು ಎಂದು ದೇವೇಗೌಡರನ್ನು ಹಾಡಿ ಹೊಗಳಿದ್ದಾರೆ. ಬಳಿಕ ಮಾತನಾಡಿದ ಹೆಚ್.ಡಿ. ದೇವೇಗೌಡ ಅವರು ಶ್ರೀ ಕೃಷ್ಣ ಮಠದ ಪೂಜೆಯ ಜೊತೆಗೆ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ಶ್ರೀಗಳಿಗೆ ಗೌರವವನ್ನು ಸಲ್ಲಿಸಲು ಬಂದಿದ್ದೇನೆ ಎಂದು ಹೇಳಿದರು.










