ಮಂಗಳೂರು: ನಗರದ ನೆಹರೂ ಮೈದಾನದಲ್ಲಿ ಧಾರಾಕಾರವಾಗಿ ಸುರಿವ ಮಳೆಯ ನಡುವೆ ದಕ ಜಿಲ್ಲಾ ಮಟ್ಟದ ಸ್ವಾತಂತ್ರ ದಿನಾಚರಣೆ ನಡೆಯಿತು. ದಕ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಕೊಡೆ ಹಿಡಿದುಕೊಂಡೇ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಬಳಿಕ ಪೆಂಡಾಲ್ನಡಿ ನಿಂತು ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.
ಬಳಿಕ ಮಾತನಾಡಿದ ಅವರು ಕಳೆದ ಒಂದು ವಾರದಲ್ಲಿ ರಾಜ್ಯದಲ್ಲಿ ನೂರು ವರ್ಷಗಳಲ್ಲಿ ಕಂಡರಿಯದ ನೆರೆ ಪ್ರವಾಹ ಉಂಟಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯಾಗಿ ಜನಸಾಮಾನ್ಯರ ಬದುಕು ಬೀದಿ ಪಾಲಾಗಿ ಸಂಕಷ್ಟದಲ್ಲಿದ್ದಾರೆ. ಅವರ ಬಾಳಲ್ಲಿ ಪುನರ್ವಸತಿಗೆ ಸಂಬಂಧಿಸಿದಂತೆ ಜಿಲ್ಲೆಯ ಸಾರ್ವಜನಿಕರು ಸಹಾಯ ಹಸ್ತದ ನೆರವು ನೀಡಿ ಸರ್ಕಾರದೊಂದಿಗೆ ಸಹಕರಿಸಬೇಕು ಎಂದು ಅವರು ಈ ಸಂದರ್ಭ ಮನವಿ ಮಾಡಿದರು.
ಜಿಲ್ಲೆಯಲ್ಲಿ ಗರಿಷ್ಟ ಮಟ್ಟದಲ್ಲಿ ಅನೇಕ ಕಡೆ ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ, ರಸ್ತೆಗಳಿಗೆ ಹಾನಿಯಾಗಿದೆ. ಹಾನಿಗೊಂಡ ಪ್ರದೇಶಗಳ ಪುನರ್ ನಿರ್ಮಾಣಕ್ಕೆ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಕಾರ್ಯಾಚರಣೆ ನಡೆಸಲಾಗುತ್ತಿದೆ. ಪ್ರವಾಹ ಪರಿಹಾರ ಕಾಮಗಾರಿಗಳನ್ನು ಕೈಗೊಳ್ಳಲು ಸರ್ಕಾರದಿಂದ ಜಿಲ್ಲೆಗೆ ಈ ಸಾಲಿನಲ್ಲಿ ಒಟ್ಟು 48.29 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ. ಇದರಡಿ 918 ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.










