ಹುಬ್ಬಳ್ಳಿ : ನಗರದ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಸಿಎಂ ಬಿ.ಎಸ್. ಯಡಿಯೂರಪ್ಪ ಅವರ ಸರ್ಕಾರ ಬಹಳ ದಿನ ಇರುತ್ತದೆ ಎಂದು ಯಾರಿಗೂ ನಂಬಿಕೆ ಇಲ್ಲ. ರೆಬಲ್ಸ್ ಶಾಸಕರನ್ನು ಇಟ್ಟುಕೊಂಡು ಸರ್ಕಾರವನ್ನು ಮುನ್ನಡೆಸಲು ಸಾಧ್ಯವಾಗುತ್ತಾ. ಹಾಲು ಕುಡಿದ ಮಕ್ಕಳೆ ಬದುಕಲ್ಲ, ಇನ್ನು ವಿಷ ಕುಡಿದವರು ಬದುಕುತ್ತಾರಾ ಎಂದು ವ್ಯಂಗ್ಯವಾಡಿದರು. ಬಿಜೆಪಿ ಸರ್ಕಾರದ ಸಚಿವರು ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇರಬೇಕಿತ್ತು. ಆದರೆ ದೆಹಲಿ ಟು ಬೆಂಗಳೂರು ಮಧ್ಯೆ ಟೂರ್ ಮಾಡುತ್ತಿದ್ದಾರೆ. ರಾಜ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ಹಾನಿಯಾದರೂ ಕೇಂದ್ರದಿಂದ ಪರಿಹಾರ ತರುವಲ್ಲಿ ಬಿಎಸ್ವೈ ಸರ್ಕಾರ ವಿಫಲವಾಗಿದೆ. ವಾಮಮಾರ್ಗದಿಂದ ಸರ್ಕಾರ ರಚನೆ ಮಾಡಿದ್ದಾರೆ. ಇನ್ನಾದರೂ ಬಿಜೆಪಿ ನಾಯಕರು ಜನರ ಕಡೆ ನೋಡಬೇಕು.
ದೇವೇಗೌಡರ ಕುಟುಂಬದ ಆರೋಪದ ಬಗ್ಗೆ ನಾನು ಸುಧೀರ್ಘವಾಗಿ ಉತ್ತರ ಕೊಟ್ಟಿದ್ದೇನೆ. ಭೈರತಿ, ಸೋಮಶೇಖರ್ರನ್ನ ನಾನು ಮುಂಬೈಗೆ ಕಳುಸಿದ್ದೇನೆ ಅಂತಾರೆ. ಹಾಗಾದರೆ ಜೆಡಿಎಸ್ನ ಹೆಚ್. ವಿಶ್ವನಾಥ್, ನಾರಾಯಣಗೌಡ ಹಾಗೂ ಗೋಪಾಲಯ್ಯರನ್ನ ಕಳುಹಿಸಿದ್ದು ಯಾರು? ಹೆಚ್ಡಿಕೆ, ಹೆಚ್ಡಿಡಿ ನನ್ನ ಮೇಲೆ ಗೂಬೆ ಕೂರಿಸೋಕೆ ನೋಡುತ್ತಿದ್ದಾರೆ ಎಂದರು.










