ಬೆಂಗಳೂರು : ಸಿದ್ದರಾಮಯ್ಯ ಅವರ ಆಡಿಯೋಗಳು ನಮ್ಮ ಬಳಿ ಇದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಟ್ವಿಟರ್ ಮೂಲಕ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದ್ದಾರೆ. “ನಮ್ಮ 80 ಜನ ಶಾಸಕರಿದ್ದು ಜೆಡಿಎಸ್ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಟ್ರಲ್ಲ ಎಂದು ನಮ್ಮ ಕಾರ್ಯಕರ್ತರೊಬ್ಬರು ಕೇಳಿದ್ದರು. ಅದಕ್ಕೆ ಲೋಕಸಭಾ ಚುನಾವಣೆ ಆಗುವವರೆಗೂ ತಾಳ್ಮೆಯಿಂದಿರಿ, ಚುನಾವಣೆಯ ನಂತರ ಕೂತು ಮಾತನಾಡೋಣ ಎಂದಿದ್ದೆ. ನಾನು ಸರ್ಕಾರ ಬೀಳಿಸುತ್ತೇನೆ ಎಂದು ಹೇಳಿಲ್ಲ, ಆ ಪ್ರಯತ್ನವನ್ನೂ ಮಾಡಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೆಟ್ಟ ಹೆಸರು ಬಂದು, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲಿ ಎಂಬ ಕಾರಣಕ್ಕೆ ಆಡಿಯೋ ಲೀಕ್ ಮಾಡಿದ್ದಾರೆ. ಹಿರಿಯ ನಾಯಕರಷ್ಟೇ ಇರುವ ಬಿಜೆಪಿಯ ಕೋರ್ ಕಮಿಟಿಯಲ್ಲೇ ಯಡಿಯೂರಪ್ಪ ಅವರಿಗೆ ಆಗದವರು ಇದ್ದಾರೆ.
ಬಿಜೆಪಿ ಸರ್ಕಾರವನ್ನು ಬೀಳಲು ಬಿಡುವುದಿಲ್ಲ ಎಂಬ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರ ಹೇಳಿಕೆಗೆ ಸಂಬಂಧಿಸಿದಂತೆ ಟ್ವೀಟ್ ಮಾಡಿದ ಅವರು, ಬಿಜೆಪಿ ಸರ್ಕಾರ ಬೀಳಲು ಬಿಡುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೆಡಿಎಸ್ನಿಂದ ಬೇರೇನು ನಿರೀಕ್ಷೆ ಮಾಡಲು ಸಾಧ್ಯ? ಇನ್ನಷ್ಟು ಜೆಡಿಎಸ್ ಶಾಸಕರು ಬಿಜೆಪಿ ಸೇರಬಹುದೆಂಬ ಭಯಕ್ಕೆ ಅವರು ಹಾಗೆ ಮಾತನಾಡಿರಲೂಬಹುದು. ಇದು ನಿರೀಕ್ಷಿತ ರಾಜಕೀಯ ಬೆಳವಣಿಗೆ. ನೋಟು ರದ್ದತಿ, ಅವೈಜ್ಞಾನಿಕ ಹಾಗೂ ಅಸರ್ಪಕ ಜಿಎಸ್ಟಿ ಜಾರಿ ಮತ್ತು ಕೇಂದ್ರ ಸರ್ಕಾರದ ಆರ್ಥಿಕ ನೀತಿಗಳ ವೈಫಲ್ಯ ದೇಶದ ಆರ್ಥಿಕ ಹಿಂಜರಿತಕ್ಕೆ ಬಹುಮುಖ್ಯ ಕಾರಣಗಳು. ಹಸಿವಿನ ಪ್ರಮಾಣ ಹೆಚ್ಚಿರುವ 118 ದೇಶಗಳ ಪಟ್ಟಿಯಲ್ಲಿ ಭಾರತ 102ನೇ ಸ್ಥಾನದಲ್ಲಿದೆ. ಇದು ದೇಶದ ಪಾಲಿನ ಕರಾಳ ದಿನಗಳು. ‘ಭಾರತ್ ಮೇ ಸಬ್ ಅಚ್ಚಾ ಹೇ’ ಎಂದರೆ ಇದಾ?” ಎಂದು ಟ್ವೀಟ್ ಮಾಡಿದ್ದಾರೆ.










