ಬೆಂಗಳೂರು : ಇನ್ನೂ ಮೂರುವರೆ ವರ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಆಗಿರುತ್ತಾರೆ. ಸಿದ್ದರಾಮಯ್ಯ ಅವರಿಗೆ ವಿರೋಧ ಪಕ್ಷದ ನಾಯಕ ಸ್ಥಾನವೇ ಖಚಿತ ಎಂದು ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರು ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ನಾನು ಏನೂ ಮಾತನಾಡುವುದಿಲ್ಲ. ಈ ತೀರ್ಪಿನಿಂದಾಗಿ ಯಡಿಯೂರಪ್ಪ ಅವರಿಗೆ ಯಾವುದೇ ತೊಂದರೆಯಾಗುವುದಿಲ್ಲ. ಇನ್ನೂ ಮೂರುವರೆ ವರ್ಷ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ. ಸಿದ್ದರಾಮಯ್ಯ ಅವರಿಗೆ ವಿಪಕ್ಷ ನಾಯಕನ ಸ್ಥಾನ ಖಚಿತ. ರಾಜ್ಯದಲ್ಲಿ ಉಪಚುನಾವಣೆಯ ಬಳಿಕ ನಾವು ಯಾವುದೇ ಕಾರಣಕ್ಕೂ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವುದಿಲ್ಲ. ಉಳಿದ ಮೂರುವರೆ ವರ್ಷ ನಾವು ಪಕ್ಷ ಸಂಘಟನೆ ಮಾಡುತ್ತೇವೆ. ಉಪ ಚುನಾವಣೆಯಲ್ಲಿ 17 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತೇವೆ ಎಂದು ಕುಮಾರಸ್ವಾಮಿಯವರೇ ಹೇಳಿದ್ದಾರೆ. ಅದರ ಬಗ್ಗೆ ಕುಮಾರಸ್ವಾಮಿಯೇ ತೀರ್ಮಾನ ಮಾಡುತ್ತಾರೆ. ಆದರೆ 17 ಕ್ಷೇತ್ರಗಳಲ್ಲೂ ಸ್ಪರ್ಧೆ ಮಾಡುವುದು ಖಚಿತ ಎಂದರು.










