ಜಾರ್ಖಂಡ್ : ಇನ್ನೂ ನಾಲ್ಕು ತಿಂಗಳಲ್ಲಿ ಮುಗಿಲೆತ್ತರದ ರಾಮಮಂದಿರ ನಿರ್ಮಾಣ ಮಾಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಘೋಷಿಸಿದ್ದಾರೆ. ಜಾರ್ಖಂಡ್ನ ಪಕೂರ್ನಲ್ಲಿ ಚುನಾವಣಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಯೋಧ್ಯೆ ರಾಮಜನ್ಮಭೂಮಿ ವಿವಾಧಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದ್ದು, ಇನ್ನೂ ನಾಲ್ಕು ತಿಂಗಳಲ್ಲಿ ಮುಗಿಲೆತ್ತರದ ರಾಮಮಂದಿರವನ್ನು ನಿರ್ಮಿಸುತ್ತೇವೆ ಎಂದು ಘೋಷಣೆ ಮಾಡಿದ್ದಾರೆ. ಅಯೋಧ್ಯೆ ವಿವಾದಿತ ಜಾಗದಲ್ಲಿ ರಾಮಮಂದಿರ ನಿರ್ಮಾಣ ಮಾಡುವಂತೆ ಸುಪ್ರೀಂ ಕೋರ್ಟ್ ನ.9ರಂದು ತೀರ್ಪು ನೀಡಿತ್ತು. ಅಲ್ಲದೆ ಮಸೀದಿ ನಿರ್ಮಿಸಲು ಮುಸ್ಲಿಮರಿಗೆ ಅಯೋಧ್ಯೆಯಲ್ಲೇ ಬೇರೆ ಎಲ್ಲಾದರೂ 5ಎಕರೆ ಜಾಗವನ್ನು ನೀಡುವಂತೆ ಆದೇಶ ಹೊರಡಿಸಿತ್ತು. ಇದನ್ನು ಪ್ರಶ್ನಿಸಿ ನ್ಯಾಯಾಲಯದಲ್ಲಿ ಸಲ್ಲಿಕೆಯಾಗಿದ್ದ 18 ಮರುಪರಿಶೀಲನಾ ಅರ್ಜಿಗಳನ್ನು ನ್ಯಾ.ಎಸ್.ಎ. ಬೊಬ್ಡೆ ನೇತೃತ್ವದ ಪಂಚ ಸದಸ್ಯ ಪೀಠ ವಜಾಗೊಳಿಸಿದ್ದು, ಇದರ ಬೆನ್ನಲ್ಲೇ ಅಮಿತ್ ಶಾ ಅವರು ಇನ್ನೂ ನಾಲ್ಕು ತಿಂಗಳಲ್ಲಿ ರಾಮಮಂದಿರ ನಿರ್ಮಿಸುತ್ತೇವೆ ಎಂದು ಹೇಳುವ ಮೂಲಕ ಪ್ರತಿಯೊಬ್ಬರು ಹುಬ್ಬೇರಿಸುವಂತೆ ಮಾಡಿದ್ದಾರೆ.










