ತಿರುವನಂತಪುರಂ : ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾಗುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧವಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಇಂದು ರಾಜ್ಯ ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದ್ದು, ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ. ಈ ಕುರಿತು ಮಾತನಾಡಿದ ಅವರು, ಸಿಎಎ ದೇಶದ ಜಾತ್ಯಾತೀತ ದೃಷ್ಠಿಕೋನಕ್ಕೆ ವಿರುದ್ಧವಾಗಿದೆ. ದೇಶದ ಜನರಲ್ಲಿರುವ ಆತಂಕವನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಈ ಕಾಯಯ್ದೆಯನ್ನು ಕೈಬಿಡಬೇಕು. ಸಂವಿಧಾನದ ಜಾತ್ಯಾತೀತ ದೃಷ್ಠಿಕೋನವನ್ನು ಎತ್ತಿಹಿಡಿಯಲು ಕ್ರಮಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು. ಕೇರಳದಲ್ಲಿ ಯಾವುದೇ ಬಂಧನ ಇರುವುದಿಲ್ಲ. ನಮ್ಮ ರಾಜ್ಯಕ್ಕೆ ಗ್ರೀಕರು, ಅರಬ್ಬರು, ರೋಮನ್ನರು ಹೀಗೆ ಎಲ್ಲರೂ ಬಂದಿದ್ದಾರೆ. ಕೇರಳಕ್ಕೆ ಜಾತ್ಯಾತೀತತೆಯ ಸುದೀರ್ಘ ಇತಿಹಾಸವಿದೆ. ನಮ್ಮ ಸಂಪ್ರದಾಯ ಎಲ್ಲರನ್ನೂ ಒಳಗೊಳ್ಳುತ್ತದೆ. ಈ ಸಂಪ್ರದಾಯವನ್ನು ಉಳಿಸಿಕೊಳ್ಳುವ ಸಲುವಾಗಿ ವಿಧಾಸಭೆ ಸಹಕರಿಸಬೇಕು ಎಂದು ಮನವಿ ಮಾಡಿದರು.










