ಬೆಂಗಳೂರು : ಭಜರಂಗಿ-2 ಸಿನಿಮಾ ಸೆಟ್ನಲ್ಲಿ ಮತ್ತೆ ಅಗ್ನಿ ಅವಘಡ ಸಂಭವಿಸಿದ್ದು, ಕಲಾವಿದರಲ್ಲಿ ಆತಂಕ ಉಂಟುಮಾಡಿದೆ. ನೆಲಮಂಗಲ ತಾಲ್ಲೂಕಿನ ಶ್ರೀನಿವಾಸಪುರ ಬಳಿಯ ಮೋಹನ್ ಬಿ.ಕೆರೆ ಸ್ಟುಡಿಯೋದಲ್ಲಿ ಚಿತ್ರೀಕರಣಕ್ಕಾಗಿ ಸೆಟ್ ಹಾಕಲಾಗಿತ್ತು. ಈ ವೇಳೆ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಸೆಟ್ ಸಂಪೂರ್ಣ ಹೊತ್ತಿ ಹುರಿದಿದೆ. ಚಿತ್ರೀಕರಣ ಸ್ಥಳದಲ್ಲಿ 400ಕ್ಕೂ ಹೆಚ್ಚು ಕಲಾವಿದರು ಹಾಗೂ ಸಹ ಕಲಾವಿದರು ಕೆಲಸ ಮಾಡುತ್ತಿದ್ದರು ಎನ್ನಲಾಗಿದ್ದು, ಅದೃಷ್ಟವಶಾತ್ ಯಾರಿಗೂ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಬೆಂಕಿ ಕಾಣಿಸುತ್ತಿದ್ದಂತೆ ಅಗ್ನಿಶಾಮಕ ದಳ ಸಿಬ್ಬಂಧಿಗಳು ಸ್ಥಳಕ್ಕೆ ಭೇಟಿ ನೀಡಿ ಬೆಂಕಿ ನಂದಿಸುವ ಕಾರ್ಯವನ್ನು ಮಾಡುತ್ತಿದ್ದು, ಕಳೆದ ಎರಡು ದಿನಗಳ ಹಿಂದೆಯೂ ಕೂಡಾ ಸೆಟ್ನಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ಅಲ್ಲದೇ ಚಿತ್ರೀಕರಣಕ್ಕೆ ತೆರಳುತ್ತಿದ್ದ ಬಸ್ ಅಪಘಾತವಾಗಿತ್ತು. ಹೀಗಾಗಿ ಚಿತ್ರತಂಡದ ನಿರ್ಲಕ್ಷವೇ ಈ ಘಟನೆಗೆ ಕಾರಣ ಎನ್ನಲಾಗಿದೆ. ಈ ಕುರಿತು ನೆಲಮಂಗಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.










