ಶಿವಮೊಗ್ಗ : ಕನ್ನಡದಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಮನನೊಂದು 9ನೇ ತರಗತಿ ವಿದ್ಯಾರ್ಥಿನಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಬಿ.ಹೆಚ್. ರಸ್ತೆಯಲ್ಲಿರುವ ಮೇರಿ ಇಮ್ಯಾಕ್ಯುಲೇಟ್ ಶಾಲೆಯಲ್ಲಿ ನಡೆದಿದೆ. ಕಾವ್ಯ(15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಎಂದು ಗುರುತಿಸಲಾಗಿದ್ದು, ಕಾವ್ಯ 4ನೇ ತರಗತಿಯಿಂದಲೂ ಇದೇ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದ್ದು, ಕಾವ್ಯ ಕಳೆದ ತಿಂಗಳು ನಡೆದ ಪರೀಕ್ಷೆಯಲ್ಲಿ ಕನ್ನಡ ವಿಷಯದಲ್ಲಿ ಕಡಿಮೆ ಅಂಕಗಳಿಸಿದ್ದಳು. ಓದಿನಲ್ಲಿ ಬುದ್ಧಿವಂತೆಯಾಗಿದ್ದರಿಂದ ಶಾಲೆಯ ಶಿಕ್ಷಕರು ಹಾಗೂ ಆಕೆಯ ತಾಯಿ ಯಾಕೆ ಕಡಿಮೆ ಅಂಕ ಗಳಿಸಿದ್ದೀಯ, ಓದಿರಲಿಲ್ಲವಾ ಎಂದು ಕೇಳಿದ್ದಾರೆ. ಹೀಗಾಗಿ ಕಡಿಮೆ ಅಂಕ ಪಡೆದಿದ್ದೇನೆ ಎಂದು ಮನನೊಂದು ವಿದ್ಯಾರ್ಥಿನಿ ವಸತಿ ನಿಲಯದ ಸ್ಟೋರ್ ರೂಮಿನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಶಂಕಿಸಲಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಧಾವಿಸಿದ ಕೋಟೆ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.










