ಬೆಂಗಳೂರು : ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ತಮಗೆ ಜೀವಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದು, ಹೀಗಾಗಿ ಮಾಜಿ ಮುಖ್ಯಮಂತ್ರಿ ಸಿಗಬೇಕಾದ ಹೆಚ್ಚಿನ ರಕ್ಷಣೆಯನ್ನು ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟಪಡಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ತಮಗೆ ಜೀವಬೆದರಿಕೆ ಇದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆಯನ್ನು ರಾಜಕೀಯ ದೃಷ್ಟಿಯಿಂದ ನೋಡದೆ ಗಂಭೀರವಾಗಿ ಪರಿಗಣಿಸಿ ಮಾಜಿ ಮುಖ್ಯಮಂತ್ರಿಗಳಿಗೆ ಏನು ಭದ್ರತೆ ನೀಡಬೇಕೋ ಅಷ್ಟು ಭದ್ರತೆಯನ್ನು ನೀಡಿದ್ದೇವೆ. ಕುಮಾರಸ್ವಾಮಿ ಅವರು ಜೀವಬೆದರಿಕೆ ಬಗ್ಗೆ ವಿವರಣೆಯನ್ನು ನೀಡಿದರೆ ಈ ಕುರಿತು ತನಿಖೆ ನಡೆಸಲಾಗುತ್ತದೆ. ಅವರ ರಕ್ಷಣೆ ನಮ್ಮ ಆದ್ಯತೆ ಎಂದು ಹೇಳಿದ್ದಾರೆ.










