ಬೆಂಗಳೂರು : ಬಳ್ಳಾರಿಯಲ್ಲಿ ಅಪಘಾತವಾದ ಕಾರನ್ನು ಸಚಿವ ಆರ್.ಅಶೋಕ್ ಅವರ ಪುತ್ರ ಶರತ್ ಅವರು ಚಲಾಯಿಸುತ್ತಿದ್ದರು ಎಂಬ ಆರೋಪ ಕೇಳಿ ಬಂದಿದ್ದು, ಈಗಾ ಸ್ವತಃ ಆರ್. ಅಶೋಕ್ ಅವರೇ ಅಪಘಾತವಾದ ಕಾರಿಗೂ ನಮಗೂ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ. ಕಳೆದ ಮೂರು ದಿನಗಳಿಂದ ಸಂಭವಿಸಿದ ಈ ಅಪಘಾತದಲ್ಲಿ ಕಾರಿನಲ್ಲಿದ್ದ ಒಬ್ಬರು ಹಾಗೂ ಪಾದಚಾರಿ ಒಬ್ಬರು ಮೃತಪಟ್ಟಿದ್ದರು. ಅಲ್ಲದೇ ಅಪಘಾತವಾದ ಕಾರಿನಲ್ಲಿ ಸಚಿವ ಆರ್.ಅಶೋಕ್ ಅವರ ಪುತ್ರ ಇದ್ದರು ಎಂಬ ಆರೋಪಗಳೂ ಕೇಳಿ ಬರುತ್ತಿದ್ದು, ಈ ಕುರಿತು ಪ್ರತಿಕ್ರಯಿಸಿದ ಸಚಿವ ಆರ್ ಅಶೋಕ್ ಅವರು, ಅಪಘಾತದಲ್ಲಿ ಇಬ್ಬರು ಅಮಾಯಕರು ಮೃತಪಟ್ಟಿದ್ದಾರೆ. ಈ ಘಟನೆ ನಿಜಕ್ಕೂ ಬೇಸರ ತರಿಸಿದೆ. ಆದರೆ ಅಪಘಾತವಾದ ಕಾರಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಅಲ್ಲದೇ ನನ್ನ ಮಗ ಕಾರು ಓಡಿಸುತ್ತಿರಲಿಲ್ಲ. ಇದನ್ನು ನಾನು ಒಬ್ಬ ಮಂತ್ರಿಯಾಗಿ ಪ್ರತಿಕ್ರಯಿಸುತ್ತಿಲ್ಲ. ಕಾನೂನು ಎಲ್ಲರಿಗೂ ಒಂದೇ, ಕಾನೂನಿನ ಮುಂದೆ ಯಾರು ಕೂಡಾ ದೊಡ್ಡವರಲ್ಲ. ತಪ್ಪಿಗೆ ತಕ್ಕ ಶಿಕ್ಷೆ ಆಗಬೇಕು. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದ ಸತ್ಯಾಂಶಗಳು ಹೊರ ಬೀಳಲಿದೆ ಎಂದರು.










