ಬೆಂಗಳೂರು : ರಾಜ್ಯದಲ್ಲಿ ಇಂದು ಮತ್ತೆ ನಾಲ್ಕು ಕೊರೊನಾ ಪ್ರಕರಣಗಳು ದೃಢವಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 55 ಕ್ಕೆ ಏರಿಕೆಯಾಗಿದೆ. ಬೆಂಗಳೂರಿನ ಇಬ್ಬರಿಗೆ, ಮೈಸೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ತಲಾ ಒಬ್ಬರಲ್ಲಿ ಹೊಸ ಕೊರೊನಾ ಪ್ರಕರಣಗಳು ಪತ್ತೆಯಾಗಿದೆ. ಆಘಾತಕಾರಿ ವಿಷಯವೆಂದರೆ ಮೈಸೂರಿನಲ್ಲಿ ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ವ್ಯಕ್ತಿಗೆ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದೆ. ನಂಜನಗೂಡಿನ ಔಷಧ ಕಾರ್ಖಾನೆಯಲ್ಲಿ ಗುಣನಿಯಂತ್ರಕ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದ 35 ವರ್ಷದ ವ್ಯಕ್ತಿ ಯಾವುದೇ ವಿದೇಶಕ್ಕೆ ತೆರಳಿರಲಿಲ್ಲ. ಹಾಗೂ ಯಾವುದೇ ಕೊರೊನಾ ಸೋಂಕಿತರೊಂದಿಗೆ ಸಂಪರ್ಕದಲ್ಲಿ ಇರಲಿಲ್ಲ ಎಂದು ತಿಳಿದು ಬಂದಿದ್ದು, ಈ ವ್ಯಕ್ತಿ ಔಷಧ ಕಾರ್ಖಾನೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವುದರಿಂದ ಕೆಲ ವೈದ್ಯಕೀಯ ತಜ್ಞರೊಂದಿಗೆ ಸಂಪರ್ಕದಲ್ಲಿ ಇದ್ದರು ಎಂದು ತಿಳಿದು ಬಂದಿದೆ. ಇನ್ನೂ ಈ ವ್ಯಕ್ತಿಯನ್ನು ಮೈಸೂರು ನಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ವ್ಯಕ್ತಿಯೊಂದಿಗೆ ಸಂಪರ್ಕದಲ್ಲಿದ್ದ 7 ಜನರನ್ನು ಗುರುತಿಸಿ ಅವರನ್ನು ಹೋಂ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ.










