ಬಾಗಲಕೋಟೆ : ಜಿಲ್ಲೆಯಲ್ಲಿ ಕೊರೊನಾ ವೈರಸ್ಗೆ ಮೊದಲ ಬಲಿಯಾಗಿದ್ದು, ಈ ಮೂಲಕ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಕಿರಾಣಿ ಹಾಗೂ ಅಡುಗೆ ಎಣ್ಣೆ ವರ್ತಕರಾಗಿದ್ದ 75 ವರ್ಷದ ವೃದ್ಧ ಯಾವುದೇ ವಿದೇಶಕ್ಕೆ ಪ್ರವಾಸ ಕೈಗೊಂಡಿರಲಿಲ್ಲ. ಆದರೆ ಕೊರೊನಾ ಲಕ್ಷಣಗಳು ಕಂಡುಬಂದ ಹಿನ್ನೆಲೆ, ಮಾರ್ಚ್ 31ರಂದು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದು, ಗುರುವಾರ ವೃದ್ಧನಿಗೆ ಸೋಂಕು ತಗುಲಿರುವುದಾಗಿ ದೃಢಪಟ್ಟಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೆ ವೃದ್ಧ ಮೃತಪಟ್ಟಿದ್ದಾರೆ. ಕೊರೊನಾ ನಿಯಮಗಳಿಗನುಸಾರವಾಗಿ ಕಡಿಮೆ ಜನರ ಸಮ್ಮುಖದಲ್ಲಿ ಇಂದು ರಾತ್ರಿ ಅಂತ್ಯಸಂಸ್ಕಾರ ನಡೆಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ಕೆ. ರಾಜೇಂದ್ರ ಅವರು ಸ್ಪಷ್ಟನೆ ನೀಡಿದ್ದು, ವೃದ್ಧ ವ್ಯಕ್ತಿಯೊಂದಿಗೆ ಕಳೆದ 15ದಿನಗಳಿಂದ ಸಂಪರ್ಕ ಹೊಂದಿರುವ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಕಾರ್ಯ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.










