ಬೆಂಗಳೂರು: ರಾಜ್ಯದಲ್ಲಿ ಮೇ 15ರವರೆಗೆ ಲಾಕ್ಡೌನ್ ಮುಂದುವರಿಸಬೇಕಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಪ್ರಧಾನಿ ಮೋದಿ ಅವರೊಂದಿಗಿನ ಮುಖ್ಯಮಂತ್ರಿಗಳ ಸಭೆಯಲ್ಲಿ ಲಾಕ್ಡೌನ್ ವಿಸ್ತರಣೆ ಕುರಿತು ರಾಜ್ಯದ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರದಾನಿ ಮೋದಿ ಅವರು ದೇಶದ ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳ ಜತೆ ಲಾಕ್ಡೌನ್ ವಿಸ್ತರಣೆ ಕುರಿತು ಸಭೆ ನಡೆಸಿದ್ದಾರೆ.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಮಾತನಾಡಿ, ರಾಜ್ಯದಲ್ಲಿ ಮೇ 15ರವೆರಗೆ ಲಾಕ್ಡೌನ್ ವಿಸ್ತರಿಸಬೇಕಾದ ಅಗತ್ಯತೆ ಇದೆ. ಆದರೆ, ವಲಯವಾರು ಲಾಕ್ಡೌನ್ಗೆ ವಿನಾಯಿತಿ ನೀಡಬೇಕು ಎಂದು ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ. ರಾಜ್ಯದ ಹಸಿರು ವಲಯದ ಜಿಲ್ಲೆಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನಾರಂಭ ಆಗಲು ಅವಕಾಶ ಕಲ್ಪಿಸಬೇಕು ಎಂದು ಮನವಿ ಮಾಡಿಕೊಂಡರು. ಮೇ.3ರ ನಂತರ ಎಷ್ಟು ದಿನಗಳ ಲಾಕ್ ಮುಂದುವರಿಯುತ್ತೆ ಎಂಬುದನ್ನು ಕೇಂದ್ರ ಸರಕಾರ ಘೋಷಣೆ ಮಾಡಬೇಕಿದೆ. ಮುಂದೆ ಏನು ಮಾಡಬೇಕು ಎಂಬುದನ್ನು ಮೇ.3ರ ನಂತರವೇ ಪ್ರಧಾನಿ ಮೋದಿ ಅವರು ಘೋಷಣೆ ಮಾಡಲಿದ್ದಾರೆ.
ಲಾಕ್ಡೌನ್ ವಿಸ್ತರಿಸಬೇಕೆ? ಬೇಡವೇ? ಒಂದು ವಿಸ್ತರಣೆಯಾದರೆ, ಯಾವ ಕ್ಷೇತ್ರಗಳಿಗೆ ವಿನಾಯಿತಿ ನೀಡಬೇಕು ಎಂಬೆಲ್ಲ ವಿಚಾರಗಳ ಕುರಿತು ಚರ್ಚೆ ನಡೆಸುವ ಸಲುವಾಗಿ ಇಂದು ಸಂಜೆ 4:30ಕ್ಕೆ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸಭೆ ನಡೆಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಂಜೆ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿಗಳ ಜತೆಗೆ ಸಭೆ ನಡೆಸಲಿದ್ದಾರೆ. ಪ್ರಸ್ತುತ ರಾಜ್ಯದ 11 ಜಿಲ್ಲೆಗಳು ಗ್ರೀನ್ಝೋನ್ ವ್ಯಾಪ್ತಿಯಲ್ಲಿವೆ. ಈ ಜಿಲ್ಲೆಗಳಲ್ಲಿ ಲಾಕ್ಡೌನ್ ವಿನಾಯಿತಿ ದೊರೆಯಬಹುದಾದ ಸಾಧ್ಯತೆ ಇದೆ.










