ಉಡುಪಿ : ಕೋವಿಡ್ ನಿರ್ವಹಣೆಗಾಗಿ ವೈದ್ಯಕೀಯ ಮತ್ತು ಸುರಕ್ಷಾ ಉಪಕರಣಗಳ ಖರೀದಿಯಲ್ಲಿ ರಾಜ್ಯ ದೊಡ್ಡ ಪ್ರಮಾಣದ ಭ್ರಷ್ಟಾಚಾರ, ಅವ್ಯವಹಾರ ನಡೆಸಿದ್ದು, ಸತ್ಯಾಸತ್ಯತೆ ಬಹಿರಂಗಕ್ಕೆ ನ್ಯಾಯಾಂಗ ತನಿಖೆ ನಡೆಸಬೇಕು ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಆಗ್ರಹಿಸಿದ್ದಾರೆ.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಲಾಗಿದ್ದ ಸ್ಪೀಕ್ ಆಫ್ ಕರ್ನಾಟಕ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತರೆ ರಾಜ್ಯಗಳಿಗೆ ಹೋಲಿಸಿದರೆ ಕನಾಟಕದಲ್ಲಿ ದುಪ್ಪಟ್ಟು ಹಣ ಕೊಟ್ಟು ಆರೋಗ್ಯ ಉಪಕರಣಗಳನ್ನು ಖರೀದಿಸಲಾಗಿದೆ. ಇದರ ಬಗ್ಗೆ ಧ್ವನಿ ಎತ್ತಿದ ಬಳಿಕ ಸಚಿವರುಗಳು ದ್ವಂದ್ವ ಹೇಳಿಕೆಗಳನ್ನು ಕೊಡುತ್ತಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದರು. ಕೋವಿಡ್ ಚಿಕಿತ್ಸೆಗೆ ಅಗತ್ಯವಿರುವ ಪಿಪಿಇ ಕಿಟ್, ಮಾಸ್ಕ್, ಸ್ಯಾನಿಟೈಸರ್, ವೆಂಟಿಲೇಟರ್ ಮತ್ತಿತರ ವೈದ್ಯಕೀಯ ಮತ್ತು ಸುರಕ್ಷಾ ಉಪಕರಣಗಳ ಖರೀದಿಯಲ್ಲಿ ರೂ 2 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆದಿದ್ದು, ಇದಕ್ಕೆ ಸೂಕ್ತ ಪುರಾವೆಗಳಿವೆ. ಸರ್ಕಾರದ ಮೇಲೆ ಜನತೆಗೆ ಅಪ ನಂಬಿಕೆಗಳು ಬರಬಾರದು. ಸತ್ಯ-ಅಸತ್ಯತೆಗಳು ರಾಜ್ಯದ ಜನತೆಗೆ ಗೊತ್ತಾಗಬೇಕು. ಒಂದು ವೇಳೆ ತನಿಖೆಗೆ ವಹಿಸದಿದ್ದರೆ ಬೀದಿಗೆ ಇಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು. ಆದ್ದರಿಂದ ಹೈಕೋರ್ಟ್ ನ ಹಾಲಿ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ತನಿಖಾ ಆಯೋಗ ರಚನೆಯಾಗಬೇಕು ಎಂದು ಅವರು ಆಗ್ರಹಿಸಿದರು.
ರಾಜ್ಯ ಬಿಜೆಪಿ ಸರ್ಕಾರ ಕೋವಿಡ್ ತಡೆಗಟ್ಟುವಲ್ಲಿ ಹಾಗೂ ರೋಗದಿಂದ ಬಳಲುತ್ತಿರುವ ಜನರಿಗೆ ಉಪಚಾರ ನೀಡುವಲ್ಲಿ ಸಂಪೂರ್ಣ ವಿಫಲವಾಗಿದೆ. ಕೋವಿಡ್ ನಿಂದ ರಾಜ್ಯದಲ್ಲಿ ಸಂಕಷ್ಟದ ಸನ್ನಿವೇಶ ಎದುರಾಗಿದೆ. ಈ ಸಂದರ್ಭದಲ್ಲಿ ಮಾನವೀಯತೆ, ಅನುಕಂಪದಿಂದ ಜನರ ಸೇವೆ ಮಾಡಬೇಕಾಗಿದ್ದ ರಾಜ್ಯ ಸರ್ಕಾರವೇ ಆರೋಗ್ಯ ಮತ್ತು ಸುರಕ್ಷ ಉಪಕರಣಗಳ ಖರೀದಿಯಲ್ಲಿ ರೂ 2 ಸಾವಿರ ಕೋಟಿಗೂ ಅಧಿಕ ಅವ್ಯವಹಾರ ನಡೆಸಿದೆ ಎಂದು ಆರೋಪಿಸಿದರು.
6-7 ವರ್ಷಗಳಷ್ಟು ಹಳೆಯದಾದ ನೂರಾರು ವೆಂಟಿಲೇಟರ್ ಗಳನ್ನು ಖರೀದಿಸಲಾಗಿದ್ದು, ಈ ಬಗ್ಗೆ ಬಿಜೆಪಿಯ ಮಾಜಿ ಶಾಸಕರುಗಳೇ ಆಕ್ಷೇಪ ವ್ಯಕ್ತಪಡಿಸಿದ್ದಾರೆ ಎಂದರು.
ಆರೋಗ್ಯ ಇಲಾಖೆಯಿಂದ ರೂ 700 ಕೋಟಿ, ಬಿಬಿಎಂಸಿ ಮತ್ತು ನಗರ ಸ್ಥಳೀಯ ಸಂಸ್ಥೆಗಳು ರೂ 200 ಕೋಟಿ, ವೈದ್ಯಕೀಯ ಶಿಕ್ಷಣ ಇಲಾಖೆ ರೂ 185 ಕೋಟಿ, ಜಿಲ್ಲಾಡಳಿತಗಳಿಗೆ ನೀಡಿರುವ ಎಸ್ಡಿಆರ್ಎಫ್ ಹಣ ರೂ 742 ಕೋಟಿ, ಕಾರ್ಮಿಕ ಇಲಾಖೆ ರೂ 1 ಸಾವಿರ ಕೋಟಿ, ಸಮಾಜ ಕಲ್ಯಾಣ, ಆಹಾರ, ಶಿಕ್ಷಣ, ಪೊಲೀಸ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಒಳಗೊಂಡಂತೆ ಇತರೆ ಇಲಾಖೆಗಳು ರೂ 500 ಕೋಟಿ, ಕೋವಿಡ್ ಆರೈಕೆ ಕೇಂದ್ರಕ್ಕೆ ಹಾಸಿಗೆ, ದಿಂಬು ಖರೀದಿಗೆ ರೂ 160 ಕೋಟಿ ಹಾಗೂ ಕೇಮದ್ರ ಸರ್ಕಾರ ಖರೀದಿಸಿ ಪೂರೈಕೆ ಮಾಡಿರುವ ಉಪಕರಣ ಮೌಲ್ಯ ರೂ 50 ಕೋಟಿ ಸೇರಿದಂತೆ ಒಟ್ಟು ರೂ 4,167 ಕೋಟಿ ವೆಚ್ಚ ಮಾಡಲಾಗಿದೆ. ಇದರಲ್ಲಿ ಅರ್ಧದಷ್ಟು ಹಣವನ್ನು ಸಚಿವರು, ಅಧಿಕಾರಿಗಳು ಲೂಟಿ ಮಾಡಿದ್ದಾರೆ. ಆದರೆ, ಸಚಿವರು ಕೇವಲ ರೂ 324 ಕೋಟಿ ಮಾತ್ರ ಇದುವರೆಗೆ ಖರ್ಚು ಮಾಡಿದ್ದೇವೆ ಎಂದು ಸುಳ್ಳು ಹೇಳಿಕೆ ನೀಡಿದ್ದಾರೆ ಎಂದು ಅವರು ದೂರಿದರು.










