ನವದೆಹಲಿ : ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಆತ್ಮಹತ್ಯೆ ಪ್ರಕರಣವನ್ನು ಸುಪ್ರೀಂ ಕೋರ್ಟ್ ಇಂದು ಸಿಬಿಐ ತನಿಖೆ ನಡೆಸಲು ಆದೇಶ ಹೊರಡಿಸಿದೆ. ಇಂದು ಸುಪ್ರೀಂ ಕೋರ್ಟ್ನಲ್ಲಿ ನಟಿ ರಿಯಾ ಚಕ್ರವರ್ತಿ ಅವರು ಪ್ರಕರಣದ ತನಿಖೆಯನ್ನು ಬಿಹಾರದಿಂದ ಮುಂಬೈಗೆ ವರ್ಗಾಯಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಿದ್ದು, ಮುಂಬೈ ಪೊಲೀಸರು ಪ್ರಕರಣದ ಎಲ್ಲಾ ಸಾಕ್ಷಿಗಳು ಹಾಗೂ ದಾಖಲೆಗಳನ್ನು ಸಿಬಿಐಗೆ ಹಸ್ತಾಂತರಿಸುವಂತೆ ಸೂಚನೆ ನೀಡಿದೆ.
ಸುಶಾಂತ್ ಆತ್ಮಹತ್ಯೆ ಪ್ರಕರಣದಲ್ಲಿ ಸುಶಾಂತ್ ಸಿಂಗ್ ಅವರ ತಂದೆ ನೀಡಿದ ದೂರನ್ನು ಆಧರಿಸಿ ಬಿಹಾರ ಪೊಲೀಸರು ದಾಖಲಿಸಿರುವ ಎಫ್ಐಆರ್ ಸರಿಯಾಗಿದೆ ಎಂದು ತಿಳಿಸಿದೆ. ನಟಿ ರಿಯಾ ಚಕ್ರವರ್ತಿ ಹಾಗೂ ಅವರ ಕುಟುಂಬಸ್ಥರೂ ನನ್ನ ಮಗನಿಗೆ ಆರ್ಥಿಕವಾಗಿ ವಂಚಿಸಿ ಮಾನಸೀಕವಾಗಿ ಹಿಂಸೆ ನೀಡಿದ್ದಾರೆ. ಅಲ್ಲದೇ ಮಗನ ಬ್ಯಾಂಕ್ ಖಾತೆಯಿಂದ ಹಣವನ್ನು ದೋಚಿದ್ದಾರೆ ಎಂದು ನೀಡಿದ ದೂರಿನ ಅನ್ವಯ ಸಿಬಿಐ ಹಾಗೂ ಇಡಿ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.










