ಬೆಂಗಳೂರು : ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಇಂದು ದೆಹಲಿಯಲ್ಲಿ ಬಿಜೆಪಿ ಪಕ್ಷ ಸೇರಲಿದ್ದಾರೆ. ಈ ಕುರಿತು ಟ್ವೀಟ್ ಮೂಲಕ ಮಾಹಿತಿ ಖಚಿತಪಡಿಸಿದ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರು ಕರ್ನಾಟಕ ಕೇಡರ್ನ ನಿವೃತ್ತಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಇಂದು ದೆಹಲಿಯಲ್ಲಿ ಬಿಜೆಪಿ ಸೇರಲಿದ್ದಾರೆ. ಬೆಂಗಳೂರು, ಚಿಕ್ಕಮಗಳೂರು ಸೇರಿದಂತೆ ಹಲವೆಡೆ ದಕ್ಷತೆಯಿಂದ ಕಾರ್ಯನಿರ್ವಹಿಸಿ ಸ್ವಯಂ ನಿವೃತ್ತಿ ಪಡೆದು ಬಿಜೆಪಿ ಸೇರುತ್ತಿದ್ದಾರೆ. ಅವರು ಬಿಜೆಪಿ ಸೇರುತ್ತಿರುವುದು ನನಗೆ ಅತೀವ ಸಂತೋಷ ತಂದಿದೆ.ಅವರಿಗೆ ಹೃದಯಪೂರ್ವಕ ಸ್ವಾಗತ ಎಂದು ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಅವರ ಸಮ್ಮುಖದಲ್ಲಿ ದೆಹಲಿಯ ಬಿಜೆಪಿ ಕಚೇರಿಯಲ್ಲಿ ಅಣ್ಣಾಮಲೈ ಅವರು ಅಧಿಕೃತವಾಗಿ ಬಿಜೆಪಿ ಪಕ್ಷವನ್ನು ಸೇರಲಿದ್ದಾರೆ. ಈ ಮೂಲಕ ರಾಜಕೀಯ ಜೀವನ ಆರಂಭಿಸಲಿದ್ದಾರೆ.
ಐಪಿಎಸ್ ಅಧಿಕಾರಿಯಾಗಿ ಉನ್ನತ ಹುದ್ದೆಗಳನ್ನು ನಿಭಾಯಿಸಿದ್ದ ಅಣ್ಣಾಮಲೈ ಅವರು ತಮ್ಮ ದಿಟ್ಟತನದಿಂದಲೇ ಖಡಕ್ ಅಧಿಕಾರಿಯೆಂಬ ಖ್ಯಾತಿಗಳಿಸಿದ್ದರು.










