ದಸರಾ ಮಹೋತ್ಸವ 2020-ಕೋವಿಡ್ ಹಿನ್ನೆಲೆಯಲ್ಲಿ ಸರಳ ಆಚರಣೆಗೆ ತೀರ್ಮಾನ…

156
firstsuddi

ಬೆಂಗಳೂರು : ಕೋವಿಡ್ 19 ಹಿನ್ನೆಲೆಯಲ್ಲಿ ಈ ಬಾರಿ ದಸರಾ ಮಹೋತ್ಸವವನ್ನು ಸರಳವಾಗಿ ಆಚರಿಸಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ.

ಇಂದು ಅವರ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಕರೊನಾ ಹಿನ್ನೆಲೆಯಲ್ಲಿ ಸಾಂಪ್ರದಾಯಿಕ ಆಚರಣೆಯನ್ನು ಕೈ ಬಿಡದೆ, ವೈಭವಕ್ಕೆ ಕಡಿವಾಣ ಹಾಕುವುದು ಸೂಕ್ತ ಎಂದು ಸಭೆಯಲ್ಲಿ ಅಭಿಪ್ರಾಯ ವ್ಯಕ್ತವಾಗಿರುವುದರಿಂದ ಹೆಚ್ಚಿನ ಜನಸಂದಣಿ ಸೇರದಂತೆ ಸಾಂಕೇತಿಕ ಆಚರಣೆಗೆ ಮಾತ್ರ ಅವಕಾಶ ನೀಡಲಾಗುವುದು ಎಂದು ಸಭೆಯಲ್ಲಿ ತೀರ್ಮಾನಿಸಲಾಯಿತು.
ದಸರಾ ಆಚರಣೆಗೆ 10 ಕೋಟಿ ರೂ.ಗಳ ಅನುದಾನವನ್ನು ಬಿಡುಗಡೆ ಮಾಡಲಾಗುವುದು. ಆಹಾರ ಮೇಳ, ಕ್ರೀಡೆ, ಯುವದಸರಾ ಮುಂತಾದ ಕಾರ್ಯಕ್ರಮಗಳನ್ನು ಈ ಬಾರಿ ಕೈಬಿಡಲಾಗುವುದು. ಗಜಪಡೆಯನ್ನು ಸಹ ಕನಿಷ್ಟ 5 ಕ್ಕೆ ಸೀಮಿತಗೊಳಿಸಲು ತೀರ್ಮಾನಿಸಲಾಯಿತು.

ನಾಡದೇವತೆ ಚಾಮುಂಡೇಶ್ವರಿಯ ಅಗ್ರಪೂಜೆ ಮತ್ತು ದಸರಾ ಉದ್ಘಾಟನೆಯನ್ನು ಕೋವಿಡ್ ಗಾಗಿ ಶ್ರಮಿಸಿರುವ ಕರೊನಾ ಯೋಧರಾದ ವೈದ್ಯರು, ನರ್ಸ್, ಆಶಾ ಕಾರ್ಯಕರ್ತರು, ಪೌರ ಕಾರ್ಮಿಕರು ಹಾಗೂ ಪೊಲೀಸ್ ಅವರಿಂದ ನೆರವೇರಿಸುವುದು ಎಂದು ತೀರ್ಮಾನಿಸಲಾಯಿತು.

ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಿದ್ಯುಕ್ತವಾಗಿ ಪೂಜೆ ನೆರವೇರಿಸಿ, 5-6 ಆನೆಗಳನ್ನು ಮಾತ್ರ ಬಳಸಿ, ಜಂಬೂ ಸವಾರಿಯನ್ನು ಅರಮನೆ ಆವರಣದಲ್ಲಿ ಮಾತ್ರ ನಡೆಸುವುದು.ಮೈಸೂರು ನಗರದಲ್ಲಿ ವಿದ್ಯುತ್ ದೀಪಾಲಂಕಾರ ಮಾಡುವುದು ಎಂದು ತೀರ್ಮಾನಿಸಲಾಯಿತು.
ಪ್ರಧಾನಮಂತ್ರಿಗಳ ಆತ್ಮನಿರ್ಭರ್ ಭಾರತ ಪರಿಕಲ್ಪನೆಯಂತೆ ಚೀನಿ ವಸ್ತುಗಳ ಮಾರಾಟಕ್ಕೆ ಅವಕಾಶ ನೀಡಬಾರದು. ದೇಶೀ ಉತ್ಪನ್ನಗಳಿಗೆ ಆದ್ಯತೆ ನೀಡಬೇಕೆಂದು ಮುಖ್ಯ ಮಂತ್ರಿಗಳು ಸೂಚಿಸಿದರು.

ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ: ಸಿ.ಎಸ್.ಅಶ್ವತ್ಥ್ ನಾರಾಯಣ್, ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವ ಸಿ.ಟಿ. ರವಿ, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್, ಸಂಸದರಾದ ಸುಮಲತಾ ಅಂಬರೀಶ್ ಮತ್ತು ಪ್ರತಾಪ್ ಸಿಂಹ, ಶಾಸಕರು, ಕೆ.ಎಸ್.ಟಿ. ಡಿ.ಸಿ ಅಧ್ಯಕ್ಷೆ ಶ್ರುತಿ, ಮುಖ್ಯ ಕಾರ್ಯದರ್ಶಿ ಟಿ. ಎಂ.ವಿಜಯಭಾಸ್ಕರ್, ಮೈಸೂರು ಜಿಲ್ಲಾಧಿಕಾರಿಗಳು ಉಪಸ್ಥಿತರಿದ್ದರು.