ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ ಭೀತಿಯಿಂದ ಬಂದ್ ಆಗಿದ್ದ ಶಾಲಾ-ಕಾಲೇಜು ಆರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ನವೆಂಬರ್ 17ರಿಂದ ಎಲ್ಲಾ ಪದವಿ ಕಾಲೇಜುಗಳನ್ನು ಆರಂಭ ಮಾಡಲು ನಿರ್ಧರಿಸಲಾಗಿದೆ. ಇಂದು ಮುಖ್ಯಂಮತ್ರಿ ಬಿ.ಎಸ್. ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪದವಿ, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭ ಮಾಡಲು ನಿರ್ಧರಿಸಲಾಗಿದೆ.
ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಅವರು, ನವೆಂವರ್ 17ರಿಂದ ಎಂಜಿನಿಯರಿಂಗ್, ಡಿಪ್ಲೋಮಾ, ಪದವಿ ಕಾಲೇಜುಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಕಾಲೇಜು ಶಿಕ್ಷಣ ಇಲಾಖೆಗಳು ಮಾರ್ಗಸೂಚಿ ಪಾಲನೆಗೆ ಅಗತ್ಯ ಕ್ರಮವಹಿಸಬೇಕು ಎಂದು ಮುಖ್ಯಮಂತ್ರಿಗಳು ಸೂಚಿಸಿದ್ದಾರೆ. ಆನ್ಲೈನ್ ಅಥವಾ ಆಫ್ಲೈನ್ ತರಗತಿ ಪಡಿಯುವ ಅವಕಾಶ ವಿದ್ಯಾರ್ಥಿಗಳಿಗೆ ಬಿಟ್ಟಿದ್ದು, ಕಾಲೇಜಿಗೆ ಬರುವವರು ರಿಜಿಸ್ಟರ್ ಮಾಡಿಕೊಳ್ಳಬೇಕು. ಪೋಷಕರ ಒಪ್ಪಿಗೆ ಕಡ್ಡಾಯವಾಗಿರಬೇಕು. ಹಾಸ್ಟೆಲ್ ವಿದ್ಯಾರ್ಥಿಗಳಿಗೂ ಅಗತ್ಯ ಮುಂಜಾಗ್ರತಾ ಕ್ರಮದ ವ್ಯವಸ್ಥೆ ಮಾಡಲಾಗುತ್ತದೆ. ಯುಜಿಸಿ ನಿಯಮದ ಪ್ರಕಾರ ಕಾಲೇಜು ಪ್ರಾರಂಭ ಮಾಡಲಾಗುತ್ತದೆ. ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಕಾಲೇಜು ಆರಂಭ ಮಾಡುವುದರ ಬಗ್ಗೆ ಸಭೆಯಲ್ಲಿ ನಿರ್ಧರಿಸಲಾಯಿತು. ಪ್ರತಿ ಕಾಲೇಜಿನಲ್ಲೂ ಟಾಸ್ಕ್ ಫೋರ್ಸ್ ಇರುತ್ತದೆ. ಹಾಗೂ ಪ್ರತಿ ಜಿಲ್ಲೆಯಲ್ಲೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗುತ್ತದೆ. ಕಾಲೇಜು ಬರುವುದಕ್ಕೆ ಯಾರಿಗೂ ಒತ್ತಾಯ ಮಾಡುವುದಿಲ್ಲ ಆದರೆ ಪೋಷಕರ ಒಪ್ಪಿಗೆ ಕಡ್ಡಾಯವಾಗಿರಬೇಕು ಎಂದು ತಿಳಿಸಿದರು.










