ಬೆಂಗಳೂರು : ಮಹಾಮಾರಿ ಕೊರೊನಾ ವೈರಸ್ನಿಂದ ಇಡೀ ದೇಶವೇ ತತ್ತರಿಸಿ ಹೋಗಿದೆ. ಇದರಿಂದ ಕಳೆದ 2 ದಿನಗಳ ಹಿಂದೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಿಹಾರ ರಾಜ್ಯಕ್ಕೆ ಕೊರೊನಾ ಲಸಿಕೆಯನ್ನು ಉಚಿತವಾಗಿ ನೀಡುವ ಭರವಸೆ ನೀಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಿರ್ಮಲಾ ಸೀತರಾಮನ್ ಅವರ ಮನವೊಲಿಸಿ ಕರ್ನಾಟಕದ ಜನತೆಗೆ ಉಚಿತ ಕೊರೊನಾ ಲಸಿಕೆಯನ್ನು ಕೊಡಿಸುವ ಧಮ್ ಇದೆಯಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ಕುಮಾರ್ ಅವರಿಗೆ ಪ್ರಶ್ನಿಸಿದ್ದಾರೆ. ಟ್ವೀಟ್ನಲ್ಲಿ “ಪ್ರಾಣ ರಕ್ಷಕ ಕೊರೊನಾ ಲಸಿಕೆಯನ್ನು ಬಿಹಾರ ರಾಜ್ಯಕ್ಕೆ ಉಚಿತವಾಗಿ ನೀಡುವ ಭರವಸೆ ನೀಡಿರುವ ನಮ್ಮ ರಾಜ್ಯದ ರಾಜ್ಯಸಭಾ ಸದಸ್ಯೆ ಮತ್ತು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರ ಔದಾರ್ಯದ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸುವಿರಾ ನಳಿನ್ ಕುಮಾರ್ ಕಟೀಲ್ ಅವರೇ?. ನಮ್ಮ ರಾಜ್ಯದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್ ಅವರ ಮನವೊಲಿಸಿ, ನಿಮ್ಮದೇ ಪಕ್ಷ ಅಧಿಕಾರದಲ್ಲಿರುವ ಕರ್ನಾಟಕದದಲ್ಲಿ ಕೊರೊನಾದಿಂದ ಭೀತಿಗೊಳಗಾಗಿರುವ ಜನರಿಗೆ ಕೊರೊನಾ ಲಸಿಕೆಯನ್ನು ಉಚಿತವಾಗಿ ಕೊಡಿಸುವ ‘ಧಮ್’ (ಇದು ನಿಮ್ಮದೇ ಭಾಷೆ) ನಿಮಗಿದೆಯೇ ಶ್ರೀ ನಳಿನ್ ಕುಮಾರ್ ಕಟೀಲ್ ಅವರೇ?” ಎಂದು ಬರೆದುಕೊಂಡಿದ್ದಾರೆ.










