ಬೆಂಗಳೂರು: ಕೋವಿಡ್-19 ಮಹಾಮಾರಿಗೆ ಲಸಿಕೆ ವಿತರಣೆ ಮಾಡಲು ಕೇಂದ್ರ ಸರ್ಕಾರ ಸಿದ್ದತೆಗಳನ್ನು ಕೈಗೊಂಡಿರುವ ಬೆನ್ನಲ್ಲೇ, ನಾಳೆ ಅಥವಾ ನಾಡಿದ್ದು ರಾಜ್ಯಕ್ಕೆ ಅಧಿಕೃತವಾಗಿ ಕೋವಿಡ್ ಲಸಿಕೆ ಬರಲಿದೆ ಎಂದು ಆರೋಗ್ಯ ಸಚಿವ ಕೆ.ಸುಧಾಕರ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಿಂದ ಇನ್ನೆರಡು ದಿನಗಳಲ್ಲಿ ಕರ್ನಾಟಕಕ್ಕೆ 13.90 ಲಕ್ಷ ಲಸಿಕೆಯನ್ನು ಬಿಡುಗಡೆ ಮಾಡಲಿದ್ದು, ಅಧಿಕೃತ ಆದೇಶ ಸಿಕ್ಕ ನಂತರ ಸಾರ್ವಜನಿಕರಿಗೆ ವಿತರಣೆಯಾಗಲಿದೆ, ಈ ವಿಷಯ ನಮಗೆ ಖುಷಿ ತಂದಿದೆ ಎಂದು ಸುಧಾಕರ್ ತಿಳಿಸಿದ್ದಾರೆ.
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮೊದಲ ಹಂತದಲ್ಲಿ 13.90 ಲಕ್ಷ ಕೋವಿಡ್ ಲಸಿಕೆಯನ್ನು ನಿಗದಿಪಡಿಸಿದೆ. ನಾಳೆ ಆಗಮಿಸಲಿದ್ದು, ನಿಗದಿತ ಸ್ಟೋರೇಜ್ಗಳಲ್ಲಿ ಸಂಗ್ರಹಣೆ ಮಾಡಲಿದ್ದೇವೆ ಎಂದು ಹೇಳಿದರು. ಮೊದಲ ಹಂತದಲ್ಲಿ ಕೋವಿಡ್ ಲಸಿಕೆಯನ್ನು ಆಶಾ ಕಾರ್ಯಕರ್ತೆಯರು, ಕೋವಿಡ್ ವಾರಿಯರ್ಸ್ಗಳಿಗೆ ವಿತರಣೆ ಮಾಡಲಾಗುವುದು. ನಂತರ ಕೇಂದ್ರದಿಂದ ಅನುಮತಿ ಸಿಕ್ಕ ತಕ್ಷಣವೇ ಸಾರ್ವಜನಿಕರಿಗೆ ವಿತರಿಸುತ್ತೇವೆ ಎಂದು ತಿಳಿಸಿದರು.
ರಾಜ್ಯದಲ್ಲಿ ಕೋವಿಡ್ ಲಸಿಕೆ ವಿತರಣೆ ಮಾಡಲು 24 ಜಿಲ್ಲೆಗಳಲ್ಲಿ 20 ಮೆಡಿಕಲ್ ಕಾಲೇಜು, 43 ತಾಲೂರು ಆಸ್ಪತ್ರೆ, 31 ಸಮುದಾಯ ಆರೋಗ್ಯ ಕೇಂದ್ರ, 87 ಪ್ರಾಥಮಿಕ ಆರೋಗ್ಯ ಕೇಂದ್ರ 30 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಗುರುತಿಸಲಾಗಿದೆ.
ಡ್ರೈ ರನ್ ನಡೆಸುತ್ತಿರುವ ಸ್ಥಳಗಳಿಗೆ ಭೇಟಿ ನೀಡಿ ಮಾತನಾಡಿದ ಸುಧಕಾರ್ ಲಸಿಕೆ ನೀಡಲು ಉತ್ತಮ ವ್ಯವಸ್ಥೆ ಮಾಡಿದ್ದಾರೆ, ಮಾರ್ಗಸೂಚಿ ಅನ್ವಯವೇ ಸಿದ್ದತೆಗಳನ್ನು ಮಾಡಲಾಗಿದೆಎಂದು ಸುಧಾಕರ್ ತಿಳಿಸಿದ್ದಾರೆ. ಡ್ರೈರನ್ ರಾಜ್ಯದ ಬೆಂಗಳೂರು, ಬೆಳಗಾವಿ, ಕಲಬುರಗಿ ಮತ್ತು ಮೈಸೂರು ಹಾಗೂ ಶಿವಮೊಗ್ಗದಲ್ಲಿ ನಡೆಯುತ್ತಿದೆ. ಭಾರತ ಸರ್ಕಾರದ ಮಾರ್ಗಸೂಚಿಯಂತೆ ಎಲ್ಲಾ ಪ್ರಕ್ರಿಯೆಗಳು ನಡೆಯುತ್ತಿವೆ. ಶುಕ್ರವಾರ ಕರ್ನಾಟಕದಾದ್ಯಂತ ಒಟ್ಟು 263 ವಿವಿಧ ಆರೋಗ್ಯ ಕೇಂದ್ರಗಳಲ್ಲಿ ಕೋವಿಡ್ ಲಸಿಕೆ ಡ್ರೈ ರನ್ ನಡೆಯಿತು.
ಲಸಿಕೆ ವಿತರಣೆ ಸಂಬಂಧ ಜಾಹಿರಾತು, ಸಾಮಾಜಿಕ ಜಾಲತಾಣಗಳಲ್ಲೂ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತದೆ. ಇಲಾಖೆಯು ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಇದುವರೆಗೂ 6.30 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆಗಾಗಿ ನೋಂದಾಯಿಸಿಕೊಂಡಿದ್ದಾರೆ. ಕೆಲವು ಮೆಡಿಕಲ್ ಮತ್ತು ಡೆಂಟಲ್ ಕಾಲೇಜುಗಳಿಂದ ನೋಂದಾಯಿಸಿಕೊಳ್ಳಲು ಮನವಿ ಮಾಡಲಾಗಿದೆ. ಜೊತೆಗೆ ಕಂದಾಯ ಮತ್ತು ಪೊಲೀಸ್ ಇಲಾಖೆ ಸೇರಿದಂತೆ ಇತರ ಇಲಾಖೆಗಳಲ್ಲಿರುವ 60 ವರ್ಷ ಮೇಲ್ಪಟ್ಟವರಿಗೂ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.










